ಮೆಹಬೂಬ ಮುಫ್ತಿ - ಪ್ರಧಾನಿ ನರೇಂದ್ರ ಮೋದಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಪೀಪಲ್ತ್ ಡೆಮೊಕ್ರಟಿಕ್ ಪಾರ್ಟಿ(ಪಿಡಿಪಿ) ಜೊತೆಗಿನ ಮೈತ್ರಿ ಮುರಿದುಕೊಂಡಿದ್ದು, ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಮುಫ್ತಿ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಕಣಿವೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬರುವ ಸಾಧ್ಯತೆ ಇದೆ.
ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರ ಮಿತಿಮೀರಿದೆ. ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಎಲ್ಲಾ ರೀತಿ ನೆರವು ನೀಡಿದೆ. ಆದರೂ ಮುಫ್ತಿ ಅವರು ವಿಫಲವಾಗಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿ ಮುಂದುವರೆಸಲು ಸಾಧ್ಯವಿಲ್ಲ. ಹೀಗಾಗಿ ಸರ್ಕಾರದಿಂದ ಹೊರ ಬರುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ರಾಮ್ ಮಾಧವ್ ಅವರು ಹೇಳಿದ್ದಾರೆ.
ದೇಶದ ಅವಿಭಾಜ್ಯ ಅಂಗ ಆಗಿರುವ ಕಾಶ್ಮೀರದ ಜನರ ಆಶಯಗಳಿಗೆ ಸ್ಪಂದಿಸುವುದರ ಜತೆಗೆ ದೇಶದ ಹಿತಾಸಕ್ತಿಯನ್ನು ಪರಿಗಣಿಸಿ ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತಕ್ಕೆ ಬಿಜೆಪಿ ಒತ್ತಾಯಿಸುತ್ತಿದೆ. ನಾವು ಪಿಡಿಪಿ ಸರ್ಕಾರದ ಉದ್ದೇಶಗಳನ್ನು ಪ್ರಶ್ನಿಸುತ್ತಿಲ್ಲ ಆದರೆ ಪ್ರಸ್ತುತ ಸರ್ಕಾರ ಕಾಶ್ಮೀರ ಕಣಿವೆಯಲ್ಲಿ ಮಾಡಬೇಕಿದ್ದ ಉದ್ದೇಶಿತ ಕಾರ್ಯಗಳನ್ನು ಪೂರೈಸಲು ವಿಫಲವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಧವ್ ಹೇಳಿದ್ದಾರೆ.
2014ರಲ್ಲಿ ನಡೆದ ಜಮ್ಮು-ಕಾಶ್ಮೀರದ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿತ್ತು. ಸುಮಾರು ಎರಡು ತಿಂಗಳ ಕಾಲ ಸರ್ಕಾರ ರಚನೆ ಕಸರತ್ತು ನಡೆಸಿದ ಬಳಿಕ, ತಮ್ಮ-ತಮ್ಮ ಸಿದ್ಧಾಂತಗಳನ್ನು ಬದಿಗೊತ್ತಿ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಸರ್ಕಾರ ರಚಿಸಿದ್ದವು.
ಪಿಡಿಪಿ ಮುಖ್ಯಮಂತ್ರಿ ಸ್ಥಾನ ಹಾಗೂ ಬಿಜೆಪಿ ಉಪಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಂಡಿದ್ದವು. ಆದರೆ, ಇಂದು ಏಕಾಏಕಿ ಜಮ್ಮು-ಕಾಶ್ಮೀರದ ಮೈತ್ರಿ ಸರ್ಕಾರದಿಂದ ಕೇಂದ್ರದ ಆಡಳಿತಾರೂಢ ಬಿಜೆಪಿ ಹೊರ ಬಂದಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos