ನಿವೃತ್ತ ನ್ಯಾಯಮೂರ್ತಿ ಜೆ.ಚಲಮೇಶ್ವರ್
ನವದೆಹಲಿ: ಎಂದಿಗೂ ರಾಜಕೀಯ ಪ್ರವೇಶಿಸುವುದಿಲ್ಲ, ಚುನಾವಣೆಯಲ್ಲಿಯೂ ಸ್ಪರ್ಧಿಸುವುದಿಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ಜೆ.ಚಲಮೇಶ್ವರ್ ಅವರು ಗುರುವಾರ ಹೇಳಿದ್ದಾರೆ.
ಖಾಸಗಿ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಅವರು, ನ್ಯಾಯಾಂಗ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಸ್ತುನಿಷ್ಠತೆಯನ್ನು ಪ್ರಶ್ನಿಸುವ ಉದ್ದೇಶವನ್ನಷ್ಟೇ ಹೊಂದಿದ್ದೆ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರೊಂದಿಗೆ ವೈಯಕ್ತಿಕ ಮಟ್ಟದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿರಲಿಲ್ಲ ಎಂದು ಹೇಳಿದ್ದಾರೆ.
ಕೊಲಿಜಿಯಂ ಸದಸ್ಯರಾಗಿದ್ದಾಗ ಸಿಜೆಐಗಳಾಗಿದ್ದ ಟಿ.ಎಸ್.ಠಾಕೂರ್, ಜೆ.ಎಸ್, ಖೇಹರ್ ಮತ್ತು ದೀಪಕ್ ಮಿಶ್ರಾ ಅವರ ಜೊತೆ ನಿಮ್ಮ ಸಂಬಂಧ ಹೇಗಿತ್ತು ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ವೈಯಕ್ತಿಗವಾಗಿ ನನಗೆ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಂಸ್ಥೆಯಲ್ಲಿ ಕೆಲವೊಂದು ವಿಷಯಗಳನ್ನು ನಾನು ಪ್ರಸ್ತಾಪಿಸುವುದು ಅನಿವಾರ್ಯವಾಗಿತ್ತು. ಹೀಗಾಗಿ ಪತ್ರಿಕಾಗೋಷ್ಠಿಯನ್ನು ಕರೆಯಬೇಕಾಗಿ ಬಂದಿತ್ತು ಎಂದು ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿದ್ದ ಚಲಮೇಶ್ವರ್ ಅವರು ಜೂ.22ರಂದು ತಮ್ಮ ಸೇವೆಯಿಂದ ನಿವೃತ್ತಿ ಪಡೆದಿದ್ದಾರೆ. ಸುಪ್ರೀಂಕೋರ್ಟ್'ನ ಹಿರಿಯ ನ್ಯಾಯಾಧೀಶರಲ್ಲಿ ಎರಡನೇ ಸ್ಥಾನದಲ್ಲಿರುವ ಚಲಮೇಶ್ವರ್ ಕಳೆದ 7 ವರ್ಷಗಳಿಂದ ಉನ್ನತ ಹುದ್ದಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ.
ಜ.12ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯ ವಿರುದ್ಧ ಸಿಡಿದೆದ್ದ ನಾಲ್ವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಲ್ಲಿ ಚಲಮೇಶ್ವರ್ ಕೂಡ ಒಬ್ಬರಾಗಿದ್ದಾರೆ. ಹಲವು ವಿವಾದಗಳಿಂದ ಹೆಸರಾಗಿದ್ದ ಚಲಮೇಶ್ವರ್ ಅವರು ನಿನ್ನೆಯಷ್ಟೇ ಸೇವೆಯಿಂದ ನಿವೃತ್ತರಾಗಿದ್ದಾರೆ.