ಪಣಜಿ: ಹಾಲಿ ಗೋವಾ ಸಿಎಂ ಮತ್ತು ಮಾಜಿ ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಅವರು ವೈದ್ಯಕೀಯ ತಪಾಸಣೆಗಾಗಿ ಮುಂಬೈಗೆ ಆಗಮಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಳೆದ ಒಂದು ತಿಂಗಳಿಗೂ ಅಧಿಕ ಸಮಯದಿಂದ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಅನಾರೋಗ್ಯದಿಂದಾಗಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಪರಿಕ್ಕರ್ ಬಳಿಕ ಮನೆಗೆ ತೆರಳಿದ್ದರು. ಇದೀಗ ಮತ್ತೆ ಆರೋಗ್ಯ ತಪಾಸಣೆಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಗೆ ಮನೋಹರ್ ಪರಿಕ್ಕರ್ ಆಗಮಿಸಿದ್ದಾರೆ.
ಮೂಲಗಳ ಪ್ರಕಾರ ಮನೋಹರ್ ಪರಿಕ್ಕರ್ ಅವರು ಈ ತಪಾಸಣೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಸಿಎಂ ಮನೋಹರ್ ಪರಿಕ್ಕರ್ ಅವರು, ಮುಂಬೈಗೆ ತೆರಳುವ ಮುನ್ನ ಪಣಜಿಯ ಡೋನಾಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ತುರ್ತು ಸಚಿವ ಸಂಪುಟ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ತಮ್ಮ ಅನುಪಸ್ಥಿತಿಯಲ್ಲಿ ಸರ್ಕಾರ ನಡೆಸುವ ಜವಾಬ್ದಾರಿ ಕುರಿತು ಪರಿಕ್ಕರ್ ಅವರು ಸಭೆಯಲ್ಲಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಸಭೆಯಲ್ಲಿ ಪರಿಕ್ಕರ್ ಸಚಿವ ಸಂಪುಟದ ಪ್ರಮುಖ ಹಿರಿಯ ಸಚಿವರಾದ, ಸುದಿನ್ ಧವಳೀಕರ್, ಫ್ರಾನ್ಸಿಸ್ ಡಿಸೋಜಾ, ವಿಜಯ್ ಸರ್ದೇಸಾಯಿ ಸೇರಿದಂತೆ ಸರ್ಕಾರದ ಉನ್ನತ ಅಧಿಕಾರಿಗಳು ಪಾಲ್ಗೊಂಡಿದ್ದರು, ಅಂತೆಯೇ ಪರಿಕ್ಕರ್ ಅನುಪಸ್ಥಿತಿಯಲ್ಲಿ ಈ ಮೂವರು ಸಚಿವರೇ ಸರ್ಕಾರದಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲ್ಲಿದ್ದಾರೆ ಎನ್ನಲಾಗಿದೆ.
ಪ್ಯಾಂಕ್ರಿಯಾಟಿಕ್ ಸಮಸ್ಯೆಯಿಂದ ಬಳಲುತ್ತಿರುವ ಮನೋಹರ್ ಪರಿಕ್ಕರ್ ಅವರು ಕಳೆದ ಫೆಬ್ರವರಿ 15ರಂದು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಲಾಗಿ ಚಿಕಿತ್ಸೆ ಪಡೆದಿದ್ದರು. ಬಳಿಕ ಫೆಬ್ರವರಿ 22ರಂದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದರಾದರೂ, ಮತ್ತೆ ಫೆಬ್ರವರಿ 25ರಂದು ಗೋವಾದ ಮೆಡಿಕಲ್ ಕಾಲೇಜಿಗೆ ದಾಖಲಾಗಿದ್ದರು. ದೇಹದ ನಿರ್ಜಲೀಕರಣದಿಂದ ಬಳಲುತ್ತಿದ್ದ ಪರಿಕ್ಕರ್ ಅವರು ಮಾರ್ಚ್ 1ರಂದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos