ಆಂಧ್ರಪ್ರದೇಶ ವಿಶೇಷ ಸ್ಥಾನಮಾನ ವಿವಾದ: ಸಚಿವ ಸ್ಥಾನಕ್ಕೆ ಇಬ್ಬರು ಬಿಜೆಪಿ ನಾಯಕರು ರಾಜೀನಾಮೆ
ಅಮರಾವತಿ: ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಬೇಡಿಕೆ ಸಂಬಂಧ ಕೇಂದ್ರ ಸರ್ಕಾರ ಹಾಗೂ ತೆಲುಗು ದೇಶಂ ಪಕ್ಷದ ನಡುವೆ ನಡೆಯುತ್ತಿದ್ದ ಶೀತಲ ಸಮರ ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ಆಂಧ್ರ ಸರ್ಕಾರದಲ್ಲಿ ಸಚಿವರಾಗಿದ್ದ ಬಿಜೆಪಿಯ ಇಬ್ಬರು ಸಚಿವರು ತಮ್ಮ ಸ್ಥಾನಗಳಿಗೆ ಗುರುವಾರ ರಾಜೀನಾಮೆ ನೀಡಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಆರೋಗ್ಯ ಸಚಿವ ಕಮಿನೇನಿ ಶ್ರೀನಿವಾಸ್ ಹಾಗೂ ದತ್ತಿತ ಸಚಿವ ಪೈದಿಕೊಂಡಲ ಮಾಣಿಕ್ಯಲಾ ರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ತಿಳಿದುಬಂದಿದೆ.
ಈ ಹಿಂದೆ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಪಿ.ವಿ.ಎನ್. ಮಾಧವ್ ಅವರು, ತೆಲುಗು ದೇಶಂ ಪಕ್ಷದ ಸಚಿವ ಸಂಪುಟದಲ್ಲಿರುವ ನಮ್ಮ ಸಚಿವರು ರಾಜೀನಾಮೆ ನೀಡುತ್ತಾರೆಂದು ಹೇಳಿದ್ದರು.
ಟಿಪಿಪಿ ಸಂಪುಟದಲ್ಲಿರುವ ನಮ್ಮ ಸಚಿವರು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡಿರುವ ಅನುದಾನ ಹಾಗೂ ಇನ್ನಿತರೆ ಕಾರ್ಯಗಳ ಬಗ್ಗೆ ಜನರಿಗೆ ನಾವು ಮಾಹಿತಿ ನೀಡುತ್ತೇವೆ. ಸ್ವಾತಂತ್ರ್ಯ ಬಂದ ಬಳಿಕ ಯಾವುದೇ ರಾಜ್ಯಕ್ಕೂ ಸಿಗದಂತೆ ಲಾಭಗಳನ್ನು ಆಂಧ್ರಪ್ರದೇಶ ರಾಜ್ಯಕ್ಕೆ ನೀಡಲಾಗಿದೆ.
ಆಂಧ್ರಪ್ರದೇಶವನ್ನು ವಿಶೇಷ ರಾಜ್ಯವೆಂದು ನಾವು ಪರಿಗಣಿಸಿದ್ದೇವೆ ಹಾಗೂ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಗಳಿಗೂ ಕೇಂದ್ರ ಸರ್ಕಾರ ಅನುದಾನಗಳನ್ನು ನೀಡುತ್ತಿದೆ. ಟಿಡಿಪಿ ಸಂಪುಟದಿಂದ ನಮ್ಮ ಸಚಿವರು ಹೊರ ಬಂದ ಬಳಿಕ ಕೇಂದ್ರ ಮಾಡಿರುವ ಎಲ್ಲಾ ಕಾರ್ಯಗಳನ್ನು ಜನರಿಗೆ ಮುಟ್ಟಿಸುತ್ತೇವೆ. ಕೇಂದ್ರ ಸರ್ಕಾರ ಆಂಧ್ರಪ್ರದೇಶಕ್ಕೆ ಯಾವುದೇ ರೀತಿಯ ಅನ್ಯಾಯವನ್ನೂ ಮಾಡುತ್ತಿಲ್ಲ ಎಂದು ತಿಳಿಸಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos