ನವದೆಹಲಿ; ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಈ ಹಿಂದೆ ನೀಡಲಾಗಿತ್ತ ತೀರ್ಪವನ್ನು ಜಾರಿಗೊಳಿಸಲು ಕರಡು ರಚಿಸುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ 2 ವಾರಗಳ ಕಾಲಾವಕಾಶ ನೀಡಿದೆ.
ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ನೀಡಲಾಗಿದ್ದ ತೀರ್ಪವನ್ನು ಪಾಲನೆ ಮಾಡಲು 2 ವಾರಗಳ ಕಾಲ ಕಾಲಾವಾಕಾಶಬೇಕೆಂದು ಸುಪ್ರೀಂಕೋರ್ಟ್ ಬಳಿ ಕೇಂದ್ರ ಸರ್ಕಾರ ಏ.27ರಂದು ಮನವಿ ಮಾಡಿಕೊಂಡಿತ್ತು.
ಈ ಮನವಿಯನ್ನು ಇಂದು ಪರಿಶೀಲನೆ ನಡೆಸಿರುವ ಸುಪ್ರೀಂಕೋರ್ಟ್, ಕರಜು ರಚಿಸಲು 2 ವಾರಗಳ ಕಾಲ ಕಾಲಾವಕಾಶವನ್ನು ನೀಡಿದೆ ಎಂದು ವರದಿಗಳು ತಿಳಿಸಿವೆ.
ಕಳೆದ ಫೆಬ್ರವರಿ 16ರಂದು ಸುಪ್ರೀಂಕೋರ್ಟ್ ಕಾವೇರಿ ವಿವಾದ ಕುರಿತಂತೆ ಅಂತಿಮ ತೀರ್ಪು ನೀಡಿತ್ತು, 6 ವಾರಗಳೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಆದೇಶ ನೀಡಿತ್ತು. ನ್ಯಾಯಾಲಯದ ಆದೇಶದಂತೆ ಆರು ವಾರಗಳ ಗಡುವು ಪೂರ್ಣಗೊಂಡಿದ್ದರೂ, ಕೇಂದ್ರ ಸರ್ಕಾರ ನಿರ್ವಹಣಾ ಮಂಡಳಿ ರಚನೆ ಮಾಡಿರಲಿಲ್ಲ. ಈ ನಡುವೆ ತಮಿಳುನಾಡಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿದ್ದವು. ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಬಳಿ ನ್ಯಾಯಾಂಗ ನಿಂದನೆ ಅರ್ಜಿಯನ್ನೂ ಸಲ್ಲಿಸಿತ್ತು.
ನಂತರ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಬಳಿ ಸ್ಪಷ್ಟೀಕರಣ ಅರ್ಜಿಯೊಂದನ್ನು ಸಲ್ಲಿಸಿತ್ತು. ಕಾವೇರಿ ನಿರ್ವಹಣಾ ಮಂಡಳಿ ಕುರಿತ ನಿಬಂಧನೆಗಳನ್ನು ಮಾರ್ಪಡಿಸಬಹುದೇ ಎಂದು ಕೇಳಿತ್ತು, ಅಲ್ಲದೆ, ನಿರ್ವಹಣಾ ಮಂಡಳಿ ರಚನೆಗೆ ಮೂರು ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿಕೊಂಡಿತ್ತು.
ಬಳಿಕ ತಮಿಳುನಾಡು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಪರಿಶೀಲನೆ ನಡೆಸಿದ್ದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಮೇ.3ರೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಕರಡು ಸಲ್ಲಿಸುವಂತೆ ಸೂಚನೆ ನೀಡಿತ್ತು. ಅಲ್ಲದೆ, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪು ನೀಡುವವರೆಗೂ ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಶಾಂತಿ ಕಾಪಾಡಬೇಕೆಂದು ಆದೇಶಿಸಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos