ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕತುವಾ ಜಿಲ್ಲೆಯಲ್ಲಿ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೋರಿ ಆರೋಪಿ ಶೀಘ್ರವೇ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಲಿದ್ದಾರೆ.
ನಿನ್ನೆಯಷ್ಟೇ ಸುಪ್ರೀಂ ಕೋರ್ಟ್ 8 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಪಂಜಾಬ್ ನ ಪಠಾಣ್ ಕೋಟ್ ಕೋರ್ಟ್ ಗೆ ವರ್ಗಾವಣೆ ಮಾಡಿತ್ತು.
ಕೆಲವೇ ದಿನಗಳಲ್ಲಿ ಸಿಬಿಐ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್ ಗೆ ಹೊಸದಾಗಿ ಮನವಿ ಸಲ್ಲಿಸಲಾಗುವುದು ಎಂದು ಅತ್ಯಾಚಾರ ಪ್ರಕರಣದ ಐವರು ಆರೋಪಿಗಳ ಪರ ವಕೀಲ ಅಂಕೂರ್ ಶರ್ಮಾ ಅವರು ಹೇಳಿದ್ದಾರೆ.
ಪ್ರಕರಣವನ್ನು ಪಂಜಾಬ್ ಗೆ ವರ್ಗಾವಣೆ ಮಾಡಿರುವುದರಿಂದ ನಮಗೆ ಹಿನ್ನೆಡೆಯಾಗಿಲ್ಲ. ಆದರೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ ಎಂದು ಶರ್ಮಾ ತಿಳಿಸಿದ್ದಾರೆ.
ಸೋಮವಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ನಿರಾಕರಿಸಿದ್ದ ಸುಪ್ರೀಂ ಕೋರ್ಟ್, ಪಠಾಣ್ ಕೋಟ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಈ ಪ್ರಕರಣವನ್ನು ವೈಯಕ್ತಿಕವಾಗಿ ವಿಚಾರಣೆ ನಡೆಸಬೇಕು ಎಂದು ಸೂಚಿಸಿದೆ.
ಅರಣ್ಯ ಪ್ರದೇಶಕ್ಕೆ ಕುದುರೆಗಳನ್ನು ಕರೆದುಕೊಂಡು ಹೋಗಿದ್ದ 8 ವರ್ಷದ ಬಾಲಕಿ ಆಸೀಫಾ ಜ.10 ರಂದು ನಾಪತ್ತೆಯಾಗಿದ್ದಳು. ಬಾಲಕಿಯನ್ನು ಅಪಹರಿಸಿದ್ದ ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಬರ್ಬರವಾಗಿ ಹತ್ಯೆ ಮಾಡಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos