ನವದೆಹಲಿ: ದೇಶಾದ್ಯಂತ ಜೈಲುಗಳಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ಬಗ್ಗೆ ಎಲ್ಲಾ ಹೈಕೋರ್ಟ್ ಗಳು ಗಮನ ನೀಡುವಂತೆ ಸುಪ್ರೀಂ ಕೋರ್ಟ್ ಹೇಳಿದೆ.
ಕೆಲವೊಂದು ಕಾರಾಗೃಹಗಳಲ್ಲಿ ಕೈದಿಗಳ ಸಂಖ್ಯೆ ಶೇಕಡಾ 150ಕ್ಕಿಂತಲೂ ಅಧಿಕವಾಗುವುದರಿಂದ ಅಷ್ಟೊಂದು ಪ್ರಮಾಣದಲ್ಲಿ ಕೈದಿಗಳಿದ್ದರೆ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಎಲ್ಲಾ ಹೈಕೋರ್ಟ್ ಗಳ ಮುಖ್ಯ ನ್ಯಾಯಮೂರ್ತಿಗಳು ಸ್ವ ಹಿತಾಸಕ್ತಿ ಅರ್ಜಿಯನ್ನಾಗಿ ತೆಗೆದುಕೊಂಡು ನ್ಯಾಯಾಲಯವು ಈ ನಿಟ್ಟಿನಲ್ಲಿ ಸಹಾಯ ಮಾಡಬೇಕೆಂದು ಹೇಳಿದೆ.
ಜೈಲುಗಳಲ್ಲಿ ಕೈದಿಗಳ ಸಂಖ್ಯೆ ಅಧಿಕವಾಗುವ ವಿಚಾರವನ್ನು ಜೈಲಿನ ಸಿಬ್ಬಂದಿ ಗಂಭೀರವಾಗಿ ಪರಿಗಣಿಸಿಲ್ಲ. ಕೆಲವು ಜೈಲುಗಳಲ್ಲಿ ಕೈದಿಗಳ ಸಂಖ್ಯೆ ಶೇಕಡಾ 150ರಷ್ಟಿರುತ್ತದೆ ಎಂದು ನ್ಯಾಯಮೂರ್ತಿಗಳಾದ ಮದನ್ ಬಿ ಲೋಕೂರ್ ಮತ್ತು ದೀಪಕ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.
ಪ್ರತಿ ರಾಜ್ಯಗಳ ಹೈಕೋರ್ಟ್ ಗಳು ಅಲ್ಲಿನ ಕಾನೂನು ಸೇವಾ ಪ್ರಾಧಿಕಾರಗಳು/ಹೈಕೋರ್ಟ್ ಕಾನೂನು ಸೇವಾ ಸಮಿತಿಗಳ ನೆರವಿನೊಂದಿಗೆ ಸ್ವತಂತ್ರವಾಗಿ ತನಿಖೆ ನಡೆಸಿ ಕಾರಾಗೃಹಗಳಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಗಮನ ಹರಿಸಬೇಕು ಏಕೆಂದರೆ ಇದರಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಈ ಸಂಬಂಧ ಸುಪ್ರೀಂ ಕೋರ್ಟ್ ನ ಪ್ರಧಾನ ಕಾರ್ಯದರ್ಶಿಗಳು ಆದೇಶದ ಪ್ರತಿಯನ್ನು ಪ್ರತಿ ಹೈಕೋರ್ಟ್ ಗಳ ರಿಜಿಸ್ಟ್ರಾರ್ ಜನರಲ್ ಗೆ ಕಳುಹಿಸಿ ಸಂಬಂಧಪಟ್ಟ ಕ್ರಮಗಳನ್ನು ತೆಗೆದುಕೊಂಡು ವರದಿಯನ್ನು ಹಿಂತಿರುಗಿಸುವಂತೆ ಹೇಳಿದೆ.