ನವದೆಹಲಿ: ವಿಶ್ವಾಸಮತ ಯಾಚಿಸದೇ ಯಡಿಯೂರಪ್ಪ ರಾಜೀನಾಮೆ ನೀಡುವ ಮೂಲಕ ಕರ್ನಾಟಕದಲ್ಲಿ ರಾಜಕೀಯ ಪ್ರಹಸನಕ್ಕೆ ತೆರೆ ಬಿದ್ದಿದ್ದು, ಕಾಂಗ್ರೆಸ್-ಜೆಡಿಎಸ್ ಅರ್ಜಿ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶರೂ ನಿಟ್ಟುಸಿರುಬಿಟ್ಟಿದ್ದಾರೆ.
ಯಡಿಯೂರಪ್ಪ ವಿಶ್ವಾಸಮತ ಪ್ರಕರಣ ಮುಕ್ತಾಯಗೊಳ್ಳುತ್ತಿದ್ದಂತೆಯೇ "ರಜೆ ದಿನಗಳನ್ನು ಆನಂದಿಸೋಣ ಎಂದು ನ್ಯಾ.ಸಿಕ್ರಿ ಹೇಳಿದ್ದಾರೆ. ನ್ಯಾ.ಸಿಕ್ರಿ ಹೇಳಿಕೆ ಬೆನ್ನಲ್ಲೇ ಕೋರ್ಟ್ ರೂಮ್ ನಲ್ಲಿರುವವರು ನಗೆಗಡಲಲ್ಲಿ ತೇಲಿದ್ದಾರೆ. ಬಹುಮತವಿಲ್ಲದಿದ್ದರೂ ಯಡಿಯೂರಪ್ಪಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್-ಜೆಡಿಎಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ನಂತರ ಸ್ಪೀಕರ್ ಬೋಪಯ್ಯ ಆಯ್ಕೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಿರಂತರ ಎರಡು ದಿನಗಳು ಕರ್ನಾಟಕದ ರಾಜಕೀಯಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿತ್ತು.
ಈಗ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿದ್ದ ಪ್ರಹಸನಗಳು ಅಂತ್ಯಗೊಂಡಿದ್ದು ಸುಪ್ರೀಂ ಕೋರ್ಟ್ ಕೂಡ ವಿಚಾರಣೆ ನಿರಾಳವಾಗಿದೆ.