ಶ್ರೀನಗರ: ಸರ್ಕಾರ ರಚಿಸಲು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿರುವುದಕ್ಕೆ ಸಂಬಂಧಿಸಿದ ವರದಿಗಳನ್ನು ಬಹಿರಂಗಪಡಿಸುವಂತೆ ನ್ಯಾಷನಲ್ ಕಾನ್ಫೆರೆನ್ಸ್ ನಾಯಕ ಓಮರ್ ಅಬ್ದುಲ್ಹಾ ಅವರು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರಿಗೆ ಒತ್ತಾಯಿಸಿದ್ದಾರೆ.
ನಿನ್ನೆ ರಾತ್ರಿ ಕಾಶ್ಮೀರ ವಿಧಾನಸಭೆ ವಿಸರ್ಜಿಸಿದ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು, ಸರ್ಕಾರ ರಚನೆಗೆ ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಮತ್ತು ಎರಡು ವಿಭಿನ್ನ ಸಿದ್ಧಾಂತ ಹೊಂದಿರುವ ರಾಜಕೀಯ ಪಕ್ಷಗಳಿಂದ ಸ್ಥಿರ ಸರ್ಕಾರ ಅಸಾಧ್ಯ ಎಂದು ಹೇಳಿದ್ದರು.
ರಾಜ್ಯಪಾಲರ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಓಮರ್ ಅಬ್ದುಲ್ಹಾ ಅವರು, ಶಾಸಕರನ್ನು ಖರೀದಿಸಲಾಗುತ್ತಿದೆ ಎಂಬುದು ರಾಜ್ಯಪಾಲರ ಗಮನಕ್ಕೆ ಬಂದಿದ್ದರೆ ಮತ್ತು ಆ ಬಗ್ಗೆ ವರದಿಗಳಿದ್ದರೆ ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲಿ. ಕುದುರೆ ವ್ಯಾಪಾರ ನಡೆಸುತ್ತಿರುವುದು ಯಾರು ಎಂಬುದು ರಾಜ್ಯದ ಜನತೆಗೆ ತಿಳಿಯಲಿ ಎಂದು ಹೇಳಿದ್ದಾರೆ.
ಶಾಸಕರ ಖರೀದಿಗೆ ಹಣ ಎಲ್ಲಿಂದ ಬಂತು ಎಂಬುದು ನನಗೆ ತಿಳಿಯಬೇಕು. ಯಾರ ಪರವಾಗಿ ಯಾರಿಗೆ ಹಣ ನೀಡಲಾಗುತ್ತಿದೆ ಎಂಬುದು ಗೊತ್ತಾಗಬೇಕು ಮತ್ತು ಯಾರನ್ನು ಖರೀದಿಸಲಾಗುತ್ತಿದೆ ಎಂಬುದು ರಾಜ್ಯಪಾಲರು ಬಹಿರಂಗಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಆಗ್ರಹಿಸಿದ್ದಾರೆ.
ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆ ಮಾಡುವಂತೆ ಪಿಡಿಪಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳಿಗೆ ಪಾಕಿಸ್ತಾನದಿಂದ ನಿರ್ದೇಶನ ಬಂದಿದೆ ಎಂದು ಆರೋಪಿಸಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಈ ಕೂಡಲೇ ಕ್ಷಮೆ ಕೇಳಬೇಕು ಎಂದು ಓಮರ್ ಅಬ್ದುಲ್ಹಾ ಒತ್ತಾಯಿಸಿದ್ದಾರೆ.
ರಾಮ್ ಮಾಧವ್ ಅವರು ಈಗಾಗಲೇ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos