ಕೇಂದ್ರ ಸಚಿವೆ ಹರ್ಸಿಮ್ರತ್ ಬಾದಲ್
ಅಮೃತಸರ: ಬಹುನಿರೀಕ್ಷಿತ ಕರ್ತಾರ್ಪುರ ಕಾರಿಡಾರ್ ಯೋಜನೆಗೆ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಶಂಕುಸ್ಥಾಪನೆ ನೆರವೇರಿಸುತ್ತಿರುವ ಹಿನ್ನಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೇಂದ್ರ ಸಚಿವರಾದ ಹರ್ಸಿಮ್ರತ್ ಕೌರ್ ಬಾದಲ್ ಹಾಗೂ ಹರ್ದೀಪ್ ಸಿಂಗ್ ಪುರಿಯವರು ಬುಧವಾರ ಪಾಕಿಸ್ತಾನಕ್ಕೆ ತೆರಳಿದ್ದಾರೆ.
ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಯೋಜನೆಗೆ ಇಂದು ಶಂಕುಸ್ಥಾಪನೆ ನೆರವೇರಿಸುತ್ತಿದ್ದು, ಕಾರ್ಯಕ್ರಮದಲ್ಲಿ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಖ್ವಾಮರ್ ಬಾಜ್ವಾ ಸೇರಿ ಹಲವು ಗಣ್ಯಾತಿ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.
ಕಾರ್ಯಕ್ರಮಕ್ಕೆ ಈ ಹಿಂದೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಪಾಕಿಸ್ತಾನ ಆಹ್ವಾನ ನೀಡಿತ್ತು. ಆದರೆ, ಪೂರ್ವ ನಿಗದಿತ ಕಾರ್ಯಕ್ರಮಗಳು ಇದ್ದ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ತೆರಳಲು ಸಾಧ್ಯವಾಗಲಿಲ್ಲ. ಹೀಗಾಗಿ ಬಾದಲ್ ಹಾಗೂ ಪುರಿಯವರು ಭಾರತವನ್ನು ಪ್ರತಿನಿಧಿಸಲು ಪಾಕಿಸ್ತಾನಕ್ಕೆ ತೆರಳಿದ್ದಾರೆ.
ಅಮೃತಸರದ ಅಟ್ಟಾರಿ ಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಾದಲ್ ಅವರು, ಪಾಕಿಸ್ತಾನದಲ್ಲಿರುವ ಐತಿಹಾಸಿಕ ಕರ್ತಾರ್ಪುರ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡುತ್ತಿರುವುದು ಅತ್ಯಂತ ಭಾವನ್ಮಕ ಸಂದರ್ಭವಿದು ಎಂದು ಹೇಳಿದ್ದಾರೆ.
ಗುರುದ್ವಾರಕ್ಕೆ ಭೇಟಿ ನೀಡಲು ಹಾಗೂ ಪೂಜೆ ಸಲ್ಲಿಸಲು ಅವಕಾಶ ಸಿಕ್ಕಿದ್ದಕ್ಕೆ ಬಹಳ ಸಂತೋಷವಾಗುತ್ತಿದೆ ಎಂದಿದ್ದಾರೆ.
ಪಂಜಾಬ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿಧು ಆವರಿಗೂ ಪಾಕಿಸ್ತಾನ ಆಹ್ವಾನ ನೀಡಿದೆ. ಆದರೆ, ಪದೇ ಪದೇ ಉಗ್ರರ ದಾಳಿ ನಡೆಯುತ್ತಿರುವ ಹಿನ್ನಲೆಯಲ್ಲಿ ಪಾಕಿಸ್ತಾನದ ಈ ಆಹ್ವಾನವನ್ನು ಅಮರೀಂದರ್ ಸಿಂಗ್ ಅವರು ತಿರಸ್ಕರಿಸಿದ್ದು, ನವಜೋತ್ ಸಿಂಗ್ ಅವರು ನಿನ್ನೆಯೇ ಪಾಕಿಸ್ತಾನಕ್ಕೆ ತೆರಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos