ಮುಂಬೈ: ಸೋಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣದಲ್ಲಿ ಇಂದಿನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಘಟನೆ ನಡೆದಾಗಿನ ಗುಜರಾತ್ ಗೃಹ ಸಚಿವ ಅಮಿತ್ ಶಾ ಅವರನ್ನು ಖುಲಾಸೆಗೊಳಿಸಿರುವುದನ್ನು ಸಿಬಿಐ ಬಾಂಬೆ ಹೈಕೋರ್ಟ್ ನಲ್ಲಿ ಸಮರ್ಥಿಸಿಕೊಂಡಿದೆ.
ಅಮಿತ್ ಶಾ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸದೇ ಇದ್ದ ಸಿಬಿಐ ನಡೆಯನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್ ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಗೆ ಸ್ಪಷ್ಟನೆ ನೀಡಿರುವ ಸಿಬಿಐ, ಅಮಿತ್ ಶಾ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿರುವುದು ಜಾಗೃತ ಹಾಗೂ ಜವಾಬ್ದಾರಿಯುತ ತೀರ್ಮಾನವೇ ಆಗಿದೆ ಎಂದು ಸಮರ್ಥಿಸಿಕೊಂಡಿದೆ. ಅಷ್ಟೇ ಅಲ್ಲದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ರಾಜಕೀಯ ಪ್ರೇರಿತವಾಗಿದ್ದು, ಜನಪ್ರಿಯತೆಗಳಿಸುವುದಕ್ಕೆ ಮಾಡಿರುವ ಕೃತ್ಯ ಎಂದು ಸಿಬಿಐ ಹೇಳಿದೆ.
"ಸೋಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣದಲ್ಲಿ ಅಮಿತ್ ಶಾ ಅವರನ್ನು ಖುಲಾಸೆಗೊಳಿಸಲಾಗಿದ್ದು ಸಿಬಿಐ 2014 ರಲ್ಲಿ ಕೇಂದ್ರದಲ್ಲಿ ಸರ್ಕಾರ ಬದಲಾವಣೆಯಾದಾಗಿನಿಂದ ಅಮಿತ್ ಶಾ ಕುರಿತ ನಿಲುವನ್ನು ಬದಲಾವಣೆ ಮಾಡಿಕೊಂಡಿದೆ" ಎಂದು ಪಿಐಎಲ್ ನಲ್ಲಿ ಆರೋಪಿಸಲಾಗಿತ್ತು. ಆದರೆ ಸಿಬಿಐ ಪರ ವಾದ ಮಂಡಿಸಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್, ಅಮಿತ್ ಶಾ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿರುವ ವಿಚಾರಣಾ ನ್ಯಾಯಾಲಯದ ಆದೇಶ ಹಾಗೂ ಅದನ್ನು ಎತ್ತಿಹಿಡಿರುವ ಮೇಲ್ಮನವಿ ಸಲ್ಲಿಸಲಾಗಿದ್ದ ನ್ಯಾಯಾಲಯಗಳ ತೀರ್ಪನ್ನು ತನಿಖಾ ಸಂಸ್ಥೆ ಕೂಲಂಕುಶವಾಗಿ ಪರಿಶೀಲಿಸಿದೆ. ಆದ್ದರಿಂದ ಶಾ ಖುಲಾಸೆ ಕುರಿತಾಗಿ ಯಾವ ಮೇಲ್ಮನವಿಯನ್ನೂ ಸಲ್ಲಿಸಿಲ್ಲ ಎಂದು ಸಿಬಿಐ ಪರ ವಕೀಲರು ಹೇಳಿದ್ದಾರೆ.
ನ್ಯಾ. ರಂಜಿತ್ ಮೋರೆ ಹಾಗೂ ಭಾರತಿ ದಂಗ್ರೆ ಅವರಿದ್ದ ವಿಭಾಗೀಯ ಪೀಠ, ಬಾಂಬೆ ಲಾಯರ್ಸ್ ಅಸೋಸಿಯೇಷ ಹಾಗೂ ಸ್ಥಳೀಯ ಪತ್ರಕರ್ತರೊಬ್ಬರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ್ದು, ಆದೇಶವನ್ನು ಕಾಯ್ದೆರಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos