ಪಂಚಕುಲ: ಎರಡು ಅತ್ಯಾಚಾರ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ಗೆ ಪುರುಷತ್ವ ಹರಣ ಪ್ರಕರಣದಲ್ಲಿ ಪಂಚಕುಲ ಸಿಬಿಐ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಆದರೆ ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವುದರಿಂದ ಡೇರಾ ಸಚ್ಛಾ ಸೌಧ ಮುಖ್ಯಸ್ಥನಿಗೆ ಬಿಡುಗಡೆ ಭಾಗ್ಯ ಇಲ್ಲದಂತಾಗಿದೆ.
ಆಶ್ರಮದಲ್ಲಿ ತನ್ನ 400 ಬೆಂಬಲಿಗರ ಪುರುಷತ್ವ ಹರಣ ಮಾಡಿದ ಪ್ರಕರಣದಲ್ಲಿ ಜಾಮೀನು ಕೋರಿ ರಾಮ್ ರಹೀಮ್ ಸಲ್ಲಿಸಿದ್ದ ಸಾಮೀನು ಅರ್ಜಿಯನ್ನು ಈ ಮುಂಚೆ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಬಳಿಕ ರಾಮ್ ರಹೀಮ್ ಸಿಂಗ್ ಸಿಬಿಐ ವಿಶೇಷ ಕೋರ್ಟ್ ಮೆಟ್ಟಿಲೇರಿದ್ದರು.
ರಾಮ್ ರಹೀಮ್ ಸಿಂಗ್ ಅರ್ಜಿಯ ವಿಚಾರಣೆ ನಡೆಸಿದ ಪಂಚಕುಲ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಜಗ್ದೀಪ್ ಸಿಂಗ್ ಅವರು ಯಾವುದೇ ಷರತ್ತುಗಳಿಲ್ಲದೆ ಜಾಮೀನು ಮಂಜೂರು ಮಾಡಿದ್ದಾರೆ. ಆದರೆ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಸಿಗದ ಕಾರಣ ರಾಮ್ ರಹೀಮ್ ಅವರ ಜೈಲುವಾಸ ಮುಂದುವರೆಯಲಿದೆ.
ಪುರುಷತ್ವ ಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ರಾಮ್ ರಹೀಮ್ ಸಿಂಗ್ ಹಾಗೂ ಇಬ್ಬರು ವೈದ್ಯರ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದೆ.