ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೆ ಮುಕ್ತ ಪ್ರವೇಶ ಕಲ್ಪಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಲು ಕೇರಳ ಸರ್ಕಾರ ಮುಂದಾಗಿದ್ದು, ಮಹಿಳೆಯರಿಗೆ ಸೂಕ್ತ ಭದ್ರತೆ ಒದಗಿಸಲು 500 ಮಹಿಳಾ ಪೊಲೀಸರನ್ನು ನಿಯೋಜಿಸಲು ನಿರ್ಧರಿಸಿದೆ.
ಪ್ರತಿಪಕ್ಷ ಸದಸ್ಯರು ಶಬರಿಮಲೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಮಹಿಳೆಯರನ್ನು ತಡೆಯಲು ಮುಂದಾದ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
ಈ ಮಧ್ಯೆ, ಗುಪ್ತಚರ ಮಾಹಿತಿಯ ಪ್ರಕಾರ, ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕೆಲಸಕ್ಕೆ ಹಾಜರಾಗಲು ಹಲವು ಮಹಿಳಾ ಪೊಲೀಸರು ನಿರಾಕರಿಸಿದ್ದಾರೆ. ಆದರೆ ಧರ್ಮ ಮತ್ತು ರಾಜಕೀಯದ ಹೊರತಾಗಿಯೂ ಎಲ್ಲರೂ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಕೇರಳ ಪೊಲೀಸ್ ಮಹಾ ನಿರ್ದೇಶಕ ಲೋಕನಾಥ್ ಬೆಹ್ರಾ ಅವರು ಹೇಳಿದ್ದಾರೆ.
ಮಹಿಳಾ ಭಕ್ತರಿಗೆ ಸೂಕ್ತ ಭದ್ರತೆ ಒದಗಿಸಲು ಈ ತಿಂಗಳಲ್ಲಿ ಶಬರಿಮಲೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ನಮ್ಮದು ಕಾನೂನು ಜಾರಿಗೊಳಿಸುವ ಸಂಸ್ಥೆ. ಹೀಗಾಗಿ ಇಲ್ಲಿ ಲಿಂಗ, ಧರ್ಮ, ರಾಜಕೀಯದ ಪ್ರಶ್ನೆ ಬರುವುದಿಲ್ಲ. ಎಲ್ಲರೂ ಅವರವರ ಕರ್ತವ್ಯ ನಿರ್ವಹಿಸಬೇಕು ಎಂದು ಬೆಹ್ರಾ ತಿಳಿಸಿದ್ದಾರೆ.
ಇತ್ತೀಚಿಗಷ್ಟೇ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು, ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಸೂಕ್ತ ಭದ್ರತೆ ಮತ್ತು ಇತರೆ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos