ಬೆಂಗಳೂರು: ಲಿಂಗಾಯತ ಸ್ವತಂತ್ರ ಧರ್ಮದ ವಿಚಾರಕ್ಕೆ ನಾವು ಕೈ ಹಾಕಬಾರದಿತ್ತು ಎಂಬ ಡಿ.ಕೆ ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಟೀಕೆ, ಟಿಪ್ಪಣಿಗಳು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಡಿ.ಕೆ.ಶಿವಕುಮಾರ್ ತಮ್ಮ ಸ್ವಂತ ಅಭಿಪ್ರಾಯ ಹೇಳಿದ್ದಾರೆ. ಈ ಹೇಳಿಕೆ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ, ಈ ಹೇಳಿಕೆಯನ್ನು ಎಲ್ಲರೂ ಸ್ವಾಗತಿಸಬೇಕು. ಕುಹಕ, ವಿರೋಧ ಯಾರಿಗೂ ಶೋಭೆಯಲ್ಲ. ಅವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಇದರಲ್ಲಿ ನನಗೆ ಯಾವುದೇ ರಾಜಕಾರಣ ಕಾಣುತ್ತಿಲ್ಲ ಎಂದು ಡಿಕೆಶಿ ಪರ ಯಡಿಯೂರಪ್ಪ ಬ್ಯಾಟಿಂಗ್ ಮಾಡಿದ್ದಾರೆ.
ಯಡಿಯೂರಪ್ಪ ಅವರು ಸಚಿವ ಡಿ.ಕೆ ಶಿವಕುಮಾರ್ ಅವರ ವಿಚಾರದಲ್ಲಿ ಯಾವುದೇ ಟೀಕೆಗೆ ಮುಂದಾಗದೆ, ಮೃಧು ಧೋರಣೆ ಅನುಸರಿಸಿದ್ದು, ಇದರ ಹಿಂದೆ ರಾಜಕೀಯ ಕಾರಣಗಳೂ ಇವೆ ಎನ್ನಲಾಗಿದೆ. ಡಿ.ಕೆ ಶಿವಕುಮಾರ್ ಪರ ಯಡಿಯೂರಪ್ಪ ಅವರ ಈ ಮೃಧುತ್ವದ ಧೋರಣೆ ಹಲವು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ.