ನವದೆಹಲಿ: ರಫೇಲ್ ಯುದ್ಧ ವಿಮಾನ ಬೆಲೆ ಕುರಿತ ಸಂಪೂರ್ಣ ಮಾಹಿತಿಗಳನ್ನು ಮುಚ್ಚಿದ ಲಕೋಟೆಯಲ್ಲಿ 10 ದಿನಗಳೊಳಗಾಗಿ ಸಲ್ಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಬುಧವಾರ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ರೂ.59 ಸಾವಿರ ಕೋಟಿ 36 ಯುದ್ಧ ವಿಮಾನಗಳನ್ನು ಫ್ರಾನ್ಸ್ ನಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಒಪ್ಪಂದದಲ್ಲಿ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಭಾರೀ ಅವ್ಯವಹಾರ ನಡೆಸಿದ್ದು, ಒಪ್ಪಂದ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಕೋರಿ ಎಂ.ಎಲ್.ಶರ್ಮಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಅ.10 ರಂದು ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿ ಎಸ್.ಕೆ. ಕೌಲ್ ಮತ್ತು ಕೆ.ಎಂ ಜೋಸೆಫ್ ಅವರನ್ನೊಳಗೊಂಡ ಪೀಠವು, ಅರ್ಜಿಗಳಲ್ಲಿ ಒಪ್ಪಂದ ಕುರಿತು ಮಾಡಲಾಗಿರುವ ಭ್ರಷ್ಟಾಚಾರ ಆರೋಪಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಆದರೆ, 29ರೊಳಗೆ ರಫೇಲ್ ಒಪ್ಪಂದ ನಿರ್ಧಾರ ಕೈಗೊಂಡ ಪ್ರಕ್ರಿಯೆ ಕುರಿತು ಮೊಹರು ಮಾಡಿದ ಲಕೋಟೆಯಲ್ಲಿ ವಿವರ ಸಲ್ಲಿಸುವಂತೆ ಸೂಚನೆ ನೀಡಿತ್ತು.
ಸುಪ್ರೀಂಕೋರ್ಟ್ ಆದೇಶದಂತೆಯೇ ಅ.27 ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ವರದಿ ಸಲ್ಲಿಸಿತ್ತು.
ಕೇಂದ್ರ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಪರಿಶೀಲನೆ ನಡೆಸಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು, ವಿಮಾನಗಳ ಬೆಲೆ ಕುರಿತು ಸಂಪೂರ್ಣ ಮಾಹಿತಿಗಳನ್ನು ಮುಚ್ಚಿದ ಲಕೋಟೆಯಲ್ಲಿ 10 ದಿನಗಳೊಳಗಾಗಿ ಸಲ್ಲಿಸುವಂತೆ ಮತ್ತೆ ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos