ಚಂಡೀಗಡ: ಗುರುಗ್ರಾಮ ಭೂ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಅವರ ಅಳಿಯ ಹಾಗೂ ಉಧ್ಯಮಿ ರಾಬರ್ಟ್ ವಾದ್ರಾ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅಕ್ರಮ ಭೂ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ಡಿಎಲ್ಎಫ್ ಮತ್ತು ಓಂಕಾರೇಶ್ವರ ಪ್ರಾಪರ್ಟೀಸ್ ಸಂಸ್ಥೆಗಳ ವಿರುದ್ಧವೂ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹರ್ಯಾಣ ಪೊಲೀಸರು, 'ನೂಹ್ ನಿವಾಸಿ ಸುರಿಂದರ್ ಶರ್ಮಾ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ' ಎಂದ ಮಾಹಿತಿ ನೀಡಿದ್ದಾರೆ.
'ವಾದ್ರಾ ಅವರಿಗೆ ಸೇರಿದ ಸ್ಕೈ ಲೈಟ್ ಹಾಸ್ಪಿಟಾಲಿಟಿ ಕಂಪನಿ ಗುರುಗ್ರಾಮ ಸೆಕ್ಟರ್ 83, ಶಿಕೊಪುರ, ಸಿಕಂದರ್ಪುರ, ಖೇದಿ ದೌಲಾ ಮತ್ತು ಸಿಹಿಯಲ್ಲಿ 7.5 ಕೋಟಿ ರೂಗೆ ಭೂಮಿ ಖರೀದಿಸಿದೆ. ಬಳಿಕ ಅದನ್ನು 55 ಕೋಟಿ ರೂಗೆ ಮಾರಾಟ ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ರಾಜೇಶ್ ಕುಮಾರ್ ತಿಳಿಸಿದ್ದಾರೆ.
ಎಫ್ಐಆರ್ ಕುರಿತಂತೆ ಪ್ರತಿಕ್ರಿಯ ನೀಡಿರುವ ರಾಬರ್ಟ್ ವಾದ್ರಾ, 'ನಿಜವಾದ ಸಮಸ್ಯೆಗಳಿಂದ ಜನರನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸಲಾಗುತ್ತಿದೆ. ಚುನಾವಣೆ ಸಮಯದಲ್ಲಿ ತೈಲ ಬೆಲೆ ಹೆಚ್ಚಳದಂತಹ ಸಂಗತಿಗಳ ಬಗ್ಗೆ ಗಮನಹರಿಸಬೇಕಲ್ಲವೇ? ಎಂದು ಕಿಡಿಕಾರಿದ್ದಾರೆ.
2010-11ರಲ್ಲಿ ಹರಿಯಾಣ ಮತ್ತು ರಾಜಸ್ಥಾನದಲ್ಲಿ ಸ್ಕೈ ಲೈಟ್ ಹಾಸ್ಪಿಟಾಲಿಟಿ ಕಂಪೆನಿ ನಡೆಸಿದ ಭೂವ್ಯವಹಾರಗಳಿಂದ ಗಳಿಸಿದ ಲಾಭಕ್ಕೆ ಸಂಬಂಧಿಸಿದಂತೆ ಮರು ಲೆಕ್ಕಪತ್ರ ವಿವರ ಸಲ್ಲಿಸುವಂತೆ ಆದಾಯ ತೆರಿಗೆ ಇಲಾಖೆ ವಾದ್ರಾ ಅವರ ಕಂಪೆನಿಗೆ ನೋಟಿಸ್ ನೀಡಿತ್ತು. ಇದನ್ನು ಪ್ರಶ್ನಿಸಿ ಸ್ಕೈಲೈಟ್ ಕಂಪೆನಿ ದೆಹಲಿ ಹೈಕೋರ್ಟ್ ಮೊರೆ ಹೋಗಿತ್ತು. ಆದರೆ, ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶದ ವಿರುದ್ಧ ಕಂಪೆನಿಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶದಲ್ಲಿ ಮಧ್ಯೆ ಪ್ರವೇಶಿಸಲು 2018ರ ಎಪ್ರಿಲ್ ನಲ್ಲಿ ನಿರಾಕರಿಸಿತ್ತು. ರಾಬರ್ಟ್ ವಾದ್ರಾ ಅವರ ಕಂಪನಿ ಕಡಿಮೆ ಬೆಲೆಗೆ ಖರೀದಿಸಿದ್ದ ಭೂಮಿಯನ್ನು ಅಧಿಕ ಬೆಲೆಗೆ ಮಾರಾಟ ಮಾಡಿ ಲಾಭ ಮಾಡಿಕೊಂಡಿದೆ ಎಂದು 2012ರಲ್ಲಿ ಅರವಿಂದ ಕೇಜ್ರಿವಾಲ್ ಅವರು ಕೂಡ ದೂರು ನೀಡಿದ್ದರು.