ಹೈದರಾಬಾದ್: ತೆಲಂಗಾಣ ವಿಧಾನಸಭೆ ವಿಸರ್ಜನೆ ಮಾಡುವುದಕ್ಕೆ ಸಂಬಂಧಿಸಿದಂತೆ ಊಹಾಪೋಹಗಳೆದ್ದಿದ್ದು ಅವಧಿಗೂ ಮುನ್ನವೇ ಚುನಾವಣೆ ಎದುರಿಸುವ ಬಗ್ಗೆ ಯಾವುದೇ ತೀರ್ಮಾನವನ್ನೂ ಕೈಗೊಂಡಿಲ್ಲ ಎಂದು ಸರ್ಕಾರ ಹೇಳಿದೆ.
ಸೆ.02 ರಂದು ಸಿಎಂ ಕೆಸಿಆರ್ ನೇತೃತ್ವದಲ್ಲಿ ತೆಲಂಗಾಣ ಸಚಿವ ಸಂಪುಟ ಸಭೆ ನಡೆದಿದ್ದು, ವಿಧಾನಸಭೆಯನ್ನು ವಿಸರ್ಜಿಸುವುದಕ್ಕೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಊಹಿಸಲಾಗಿತ್ತು..
ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಸಭೆ ನಡೆಸಿದ ಹಣಕಾಸು ಸಚಿವ ರಾಜೇಂದರ್ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದು, ಅವಧಿಗೂ ಮುನ್ನ ಚುನಾವಣೆಗೆ ಹೋಗುವುದಕ್ಕೆ ಸಂಬಂಧಿಸಿದಂತೆ ಯಾವ ನಿರ್ಧಾರವನ್ನೂ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ಆದರೆ ಉಪಮುಖ್ಯಮಂತ್ರಿ ಶ್ರೀಹರಿ ಪ್ರತಿಕ್ರಿಯೆ ನೀಡಿದ್ದು, ಇನ್ನೂ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವುದಕ್ಕೆ ಸಧ್ಯದಲ್ಲೇ ಮತ್ತೊಂದು ಸುತ್ತಿನ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ.