ಕೋಲ್ಕತ್ತಾ: ದಕ್ಷಿಣ ಕೋಲ್ಕತ್ತಾದ ತಾರತಲಾದಲ್ಲಿ 40 ವರ್ಷದಷ್ಟು ಹಳೆಯದಾದ ಮಾಜೇರ್ ಹಾಟ್ ಮೇಲ್ಸೇತುವೆ ಭಾಗಶಃ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ರೈಲ್ವೆ ಹಳಿಯ ಮೇಲೆ ಸೇತುವೆ ಕುಸಿದಿದೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ನಗರಾಭಿವೃದ್ಧಿ ಸಚಿವ ಫಿರ್ಹಾದ್ ಹಕೀಂ, ಗಾಯಗೊಂಡಿರುವ 6 ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವರೆಗೂ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ". ಎಂದು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆದೇಶಿಸಿದ್ದಾರೆ.
ಘಟನೆ ನಡೆದಾಗ ಡಾರ್ಜಿಲಿಂಗ್ ನಲ್ಲಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತಕ್ಷಣವೇ ಕೋಲ್ಕತ್ತಾಗೆ ತೆರಳಿದ್ದಾರೆ. "ಮೇಲ್ಸೇತುವೆ ಕುಸಿದಿರುವುದು ಆತಂಕ ಮೂಡಿಸಿದೆ. ರಕ್ಷಣಾ ಕಾರ್ಯಾಚರಣೆಯ ತಂಡದಿಂದ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಮೇಲ್ಸೇತುವೆ ಅವಶೇಷಗಳಡಿಯಲ್ಲಿ ಮಿನಿ ಬಸ್ ಹಾಗೂ ಖಾಸಗಿ ಕಾರುಗಳು ಸೇರಿರುವ ಸಾಧ್ಯತೆ ಇದೆ.