ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧದ ಪ್ರಚೋದನಾಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರ ಸೂಕ್ತ ಆದೇಶ ಹೊರಡಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಆದೇಶಿಸಿದೆ.
ಯೋಗಿ ಆದಿತ್ಯನಾಥ್ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಬಾದ್ ಹೈಕೋರ್ಟ್ ವಜಾಗೊಳಿಸಿದ್ದು, ಅದನ್ನು ಪ್ರಶ್ನಿಸಿ ರಶೀದ್ ಖಾನ್ ಎಂಬುವವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಪೀಠ, ಹೈಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿರುವುದರಿಂದ ನಾವೇ ನೇರವಾಗಿ ಸೂಕ್ತ ಆದೇಶ ಹೊರಡಿಸುವಂತೆ ಗೋರಖಪುರ್ ಮ್ಯಾಜಿಸ್ಟ್ರೇಟ್ ಗೆ ಸೂಚಿಸುತ್ತಿದ್ದೇವೆ ಎಂದು ಹೇಳಿದೆ.
ಯೋಗಿ ಆದಿತ್ಯನಾಥ್ ಮತ್ತು ಇತರರ ವಿರುದ್ಧ ವಿಚಾರಣೆ ನಡೆಸಲು ಮ್ಯಾಜಿಸ್ಟ್ರೇಟ್ ಕೋರ್ಟ್ ಒಪ್ಪಿಗೆ ನೀಡಿರಲಿಲ್ಲ. ಕಳೆದ ವರ್ಷ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ವಿಚಾರಣೆಗೆ ಬೇಕಾದ ಕಡ್ಡಾಯ ಒಪ್ಪಿಗೆಯನ್ನು ಉತ್ತರ ಪ್ರದೇಶ ಸರ್ಕಾರ ನೀಡಿರಲಿಲ್ಲ.
ಯೋಗಿ ಆದಿತ್ಯನಾಥ್ ಅವರು ಸಂಸದರಾಗಿದ್ದ ವೇಳೆ 2007, ಜನವರಿ 27ರಂದು ಗೋರಖಪುರ್ ದಲ್ಲಿ ನಡೆದ ಕೋಮುಗಲಭೆಗಳಿಗೆ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ.