ನವದೆಹಲಿ: ಕೇಂದ್ರ ಸರ್ಕಾರ ಫ್ರಾನ್ಸ್ ನೊಂದಿಗೆ ಮಾಡಿಕೊಂಡಿದ್ದ ರಫೆಲ್ ಯುದ್ಧ ವಿಮಾನ ಒಪ್ಪಂದದಲ್ಲಿ ಹಗರಣ ನಡೆದಿದೆ ಎಂದು ಆಕ್ಷೇಪಿಸಿ ಸುಪ್ರೀಂ ಕೋರ್ಟ್ ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದವರಲ್ಲಿ ಒಬ್ಬರಾದ ಕೇಂದ್ರದ ಮಾಜಿ ಸಚಿವ ಅರುಣ್ ಶೌರಿ ಸುಪ್ರೀಂ ಕೋರ್ಟ್ ಬುಧವಾರ ನೀಡಿರುವ ತೀರ್ಪಿನ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.
ರಫೆಲ್ ಯುದ್ಧ ವಿಮಾನ ಒಪ್ಪಂದದ ದಾಖಲೆಗಳ ಸ್ವೀಕಾರಾರ್ಹತೆ ಬಗ್ಗೆ ಕೇಂದ್ರ ಸರ್ಕಾರ ವಿಚಿತ್ರವಾದ ವಾದ ಮಂಡಿಸುತ್ತಿದ್ದು ಅದನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿ ಪುನರ್ ಪರಿಶೀಲನಾ ಅರ್ಜಿ ವಿಚಾರಣೆಗೆ ಮುಂದಾಗಿರುವುದು ನಿಜಕ್ಕೂ ಖುಷಿ ತಂದಿದೆ. ಸುಪ್ರೀಂ ಕೋರ್ಟ್ ಒಮ್ಮತದ ತೀರ್ಪು ನೀಡಿದೆ.
ಕೇಂದ್ರ ಸರ್ಕಾರದ ತೀರ್ಪು ನೋಡಿದರೆ ರಕ್ಷಣಾ ಒಪ್ಪಂದದಲ್ಲಿ ಯಾವ ತಪ್ಪುಗಳನ್ನು ಬೇಕಾದರೂ ಮಾಡಬಹುದು ಎಂಬ ಅಭಿಪ್ರಾಯ ಮೂಡುತ್ತದೆ ಎಂದು ಶೌರಿ ಹೇಳಿದ್ದಾರೆ.