ನವದೆಹಲಿ: ನಟಿ ಹಾಗೂ ಬಿಜೆಪಿ ಅಭ್ಯರ್ಥಿ ಜಯಪ್ರದಾ ಅವರ ವಿರುದ್ಧ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಮಾಡಿರುವ ಖಾಕಿ ಅಂಡರ್ ವೇರ್ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು, ಅಜಂ ಖಾನ್ ಅವರ ಹೇಳಿಕೆ ಅತ್ಯಂತ ನಾಚಿಕೆಗೇಡಿನದ್ದಾಗಿದೆ. ಈ ಸಂಬಂಧ ವಿವರಣೆ ನೀಡುವಂತೆ ಈ ಕೂಡಲೇ ಅವರಿಗೆ ಷೋಕಾಸ್ ನೋಟಿಸ್ ನೀಡುತ್ತೇವೆ. ಅಂತೆಯೇ ಅಜಂಖಾನ್ ಅವರ ಸ್ಪರ್ಧೆಯನ್ನು ತಡೆ ಹಿಡಿಯುವಂತೆ ಚುನಾವಣಾ ಆಯೋಗಕ್ಕೂ ಮನವಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ನಿನ್ನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದ ಸಮಾಜವನಾದಿ ಪಕ್ಷದ ಚುನಾವಣಾ ರ್ಯಾಲಿಯಲ್ಲಿ ಮಾಜಿ ಸಿಎಂ ಅಖಿಲೇಶ್ ಯಾದವ್ ಕೂಡ ಉಪಸ್ಥಿತರಿದ್ದರು. ಇದೇ ಕಾರ್ಯಕ್ರಮದ ವೇದಿಕೆಯಲ್ಲೇ ಅಜಂಖಾನ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ವಿಡಿಯೋವನ್ನು ಟ್ವಿಟರ್ ಬಳಕೆದಾರರೊಬ್ಬರು ರೇಖಾ ಶರ್ಮಾ ಅವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದರು. ಇದಕ್ಕೆ ರೇಖಾ ಶರ್ಮಾ ಅವರು ಉತ್ಚತರಿಸುವ ವೇಳೆ ಅಜಂಖಾನ್ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.