ರಾಯ್ ಪುರ: ಛತ್ತೀಸ್ ಘಡದಲ್ಲಿ ಸೇನಾಪಡೆಗಳು ಮತ್ತು ನಕ್ಸಲರ ನಡುವೆ ಭೀಕರ ಎನ್ ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಕನಿಷ್ಛ 7 ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
ಛತ್ತೀಸ್ ಘಡದ ರಾಜನಂದಗಾಂವ್ ನ ಸೀತಾಗೋಟಾ ಕಾಡಿನಲ್ಲಿ ನಕ್ಸಲರು ಅಡಗಿರುವ ಕುರಿತು ಮಾಹಿತಿ ಪಡೆದ ಜಿಲ್ಲಾ ಮೀಸಲು ಪಡೆ ಯೋಧರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ನಕ್ಸಲರ ಮೇಲೆ ಗುಂಡಿನ ದಾಳಿ ನಡೆಸಿದ್ದು, ನಕ್ಸಲರೂ ಕೂಡ ಪ್ರತಿದಾಳಿ ನಡೆಸಿದ್ದಾರೆ. ಸುಮಾರು 2 ಗಂಟೆಗಳ ಕಾಲ ನಿರಂತರವಾಗಿ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ 7 ನಕ್ಸಲರು ಸಾವಿಗೀಡಾಗಿದ್ದಾರೆ.
ಪ್ರಸ್ತುತ ಘಟನಾ ಪ್ರದೇಶವನ್ನು ವಶಕ್ಕೆ ಪಡೆದಿರುವ ಜಿಲ್ಲಾ ಮೀಸಲು ಪಡೆ ಯೋಧರು ಸಾರ್ವಜನಿಕರಿಗೆ ನಿರ್ಬಂಧ ಹೇರಿದ್ದು, ನಕ್ಸಲರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಅಂತೆಯೇ ಹಲವು ನಕ್ಸಲರು ಪರಾರಿಯಾಗಿರುವ ಸಾಧ್ಯತೆ ಇದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಅಲ್ಲದೆ ಸುತ್ತಮುತ್ತಲ ಗ್ರಾಮದಲ್ಲಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಇನ್ನು ಈ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳ ಸಾವು-ನೋವಿನ ಕುರಿತು ಮಾಹಿತಿ ಲಭ್ಯವಾಗಿಲ್ಲ.
ಈ ಬಗ್ಗೆ ಮಾಹಿತಿ ನೀಡಿರುವ ಛತ್ತೀಸ್ ಘಡ ಪೊಲೀಸ್ ಮಹಾ ನಿರ್ದೇಶಕ ಡಿಎಂ ಅವಸ್ಥಿ ಅವರು, ಕಾರ್ಯಾಚರಣೆಯಲ್ಲಿ 7 ಮಂದಿ ನಕ್ಸಲರು ಸಾವನ್ನಪ್ಪಿದ್ದು, ಅವರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಲಾಗಿದೆ. ಅಂತೆಯೇ ಘಟನಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಕೂಡ ಆರಂಭಿಸಲಾಗಿದ್ದು, ಈ ಕುರಿತಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos