ದೇಶ

ಭಾನುವಾರ ಮಧ್ಯಾಹ್ನ ದೆಹಲಿಯ ನಿಗಂಬೋಧ್ ಘಾಟ್ ನಲ್ಲಿ ಅರುಣ್ ಜೇಟ್ಲಿ ಅಂತ್ಯಕ್ರಿಯೆ

Lingaraj Badiger

ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ, ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರು ಶನಿವಾರ ವಿಧಿವಶರಾಗಿದ್ದು, ಭಾನುವಾರ ಮಧ್ಯಾಹ್ನ ಅವರ ಅಂತ್ಯಕ್ರಿಯೆ ನಡೆಯಲಿದೆ.

ದೆಹಲಿಯ ನಿಗಂಬೋಧ್ ಘಾಟನ್ ನಲ್ಲಿ ನಾಳೆ ಮಧ್ಯಾಹ್ನ ಅರುಣ್ ಜೇಟ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಬಿಜೆಪಿಯ ಸುಧಾಂಶು ಮಿತ್ತಲ್ ಅವರು ತಿಳಿಸಿದ್ದಾರೆ.

ಅರುಣ್ ಜೇಟ್ಲಿ ಅವರ ಪಾರ್ಥಿವ ಶರೀರವನ್ನು ನಾಳೆ ಬೆಳಗ್ಗೆ ಕೈಲಾಶ್ ಕಾಲೋನಿಯ ಅವರ ನಿವಾಸದಿಂದ ಬಿಜೆಪಿ ಪ್ರಧಾನ ಕಚೇರಿಗೆ ತೆಗೆದುಕೊಂಡು ಹೋಗಲಾಗುತ್ತಿದ್ದು, ಮಧ್ಯಾಹ್ನದವರೆಗೆ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಲ್ಲಿಂದ ಮೆರವಣಿಗೆ ಮೂಲಕ ನಿಗಂಬೋಧ್ ಘಾಟ್ ಗೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

66 ವರ್ಷದ ಅರುಣ್ ಜೇಟ್ಲಿ ಅವರು ಉಸಿರಾಟ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಆಗಸ್ಟ್ 9ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

SCROLL FOR NEXT