ದೇಶ

ಕಾಶ್ಮೀರದಲ್ಲಿ ಸಹಜ ಸ್ಥಿತಿ ಇದ್ದರೆ ನಮ್ಮನ್ನು ವಾಪಸ್ಸು ಕಳುಹಿಸಿದ್ದು ಏಕೆ?: ರಾಹುಲ್ ಗಾಂಧಿ

Lingaraj Badiger

ನವದೆಹಲಿ: ಪ್ರತಿಪಕ್ಷಗಳ ನಾಯಕರ ನಿಯೋಗಕ್ಕೆ ಜಮ್ಮು ಮತ್ತು ಕಾಶ್ಮೀರ ಭೇಟಿಗೆ ಅವಕಾಶ ನೀಡದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕಾಶ್ಮೀರದಲ್ಲಿ ಸಹಜ ವಾತಾವರಣವಿದೆ ಎಂದ ಮೇಲೆ ನಮ್ಮನ್ನು ವಾಪಸ್ಸು ಕಳುಹಿಸಿದ್ದು ಏಕೆ? ಎಂದು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದ 12 ಪ್ರತಿಪಕ್ಷಗಳ ನಾಯಕರ ನಿಯೋಗ ಇಂದು ಜಮ್ಮು ಮತ್ತು ಕಾಶ್ಮೀರ ಭೇಟಿಗಾಗಿ ಶ್ರೀನಗರಕ್ಕೆ ತೆರಳಿತ್ತು. ಆದರೆ ಪ್ರತಿಪಕ್ಷಗಳ ನಿಯೋಗವನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿಯೇ ತಡೆದ ಭದ್ರತಾ ಸಿಬ್ಬಂದಿ, ಅವರನ್ನು ವಾಪಸ್ ದೆಹಲಿಗೆ ಕಳುಹಿಸಿದ್ದಾರೆ.

ಕೇಂದ್ರ ಸರ್ಕಾರದ ಈ ವರ್ತನೆಗೆ ಕಿಡಿ ಕಾರಿದ ರಾಹುಲ್​ ಗಾಂಧಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಮೋದಿ ಸರ್ಕಾರ ಪ್ರತಿಪಕ್ಷ ನಿಯೋಗಕ್ಕೆ ಅವಕಾಶ ಕಲ್ಪಿಸದೇ ಏನನ್ನೊ ಮುಚ್ಚಿಡುತ್ತಿದೆ? ಎಂದು ಪ್ರಶ್ನಿಸಿದ್ದಾರೆ.

ಶ್ರೀನಗರದಿಂದ ದೆಹಲಿಗೆ ವಾಪಸ್ ಆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಕೆಲವು ದಿನಗಳ ಹಿಂದಷ್ಟೇ ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್​ ಸಿಂಗ್​ ಅವರು ಕಣಿವೆ ರಾಜ್ಯಕ್ಕೆ ಭೇಟಿ ನೀಡುವಂತೆ ನನಗೆ ಆಹ್ವಾನ ನೀಡಿದ್ದರು. ಅದರೆ ಇಂದು ಕಾಶ್ಮೀರಕ್ಕೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಯನ್ನು ತಿಳಿಯಲು ಬಯಸಿದ್ದೇವು. ಆದರೆ ಶ್ರೀನಗರ ವಿಮಾನ ನಿಲ್ದಾಣದಿಂದ ನಮ್ಮನ್ನು ವಾಪಸ್ ಕಳುಹಿಸಲಾಗಿದೆ ಎಂದರು.

ಅಲ್ಲಿನ ಭದ್ರತಾ ಸಿಬ್ಬಂದಿ ನಮ್ಮೊಂದಿಗೆ ಇದ್ದ ಮಾಧ್ಯಮದವರೊಂದಿಗೆ ಅನುಚಿತವಾಗಿ ವರ್ತಿಸಿದರು ಮತ್ತು ಅವರ ಮೇಲೆ ಹಲ್ಲೆ ನಡೆಸಿದರು. ಇದು ಕಾಶ್ಮೀರದಲ್ಲಿ ಸಹಜ ಸ್ಥಿತಿ ಇಲ್ಲ ಎಂಬುದನ್ನು ತೋರಿಸುತ್ತದೆ ಎಂದರು.

SCROLL FOR NEXT