ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಇಂದು ಮಧ್ಯಾಹ್ನ ನಡೆದ ಬೃಹತ್ ಸಮಾರಂಭದಲ್ಲಿ ಜೆಎಂಎಂ ನಾಯಕ ಹೇಮಂತ್ ಸೋರೆನ್ 11ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.
ಹೇಮಂತ್ ಸೋರೆನ್ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದಲ್ಲಿ ಅನೇಕ ರಾಜಕೀಯ ನಾಯಕರು ಪಾಲ್ಗೊಳ್ಳುವ ಮೂಲಕ ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶಿಸಲಾಯಿತು.
ಮೊರಾಬಾದಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ದ್ರೌಪದಿ ಮುರ್ಮು, ಹೇಮಂತ್ ಸೋರೆನ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯನ್ನು ಬೋಧಿಸಿದರು. ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಿಪಿಎಂ ಪಕ್ಷದ ಸೀತಾರಾಂ ಯೆಚೂರಿ, ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ , ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಸೇರಿದಂತೆ ಇತರ ಅನೇಕ ಪ್ರತಿಪಕ್ಷಗಳ ಮುಖಂಡರು ಒಂದೇ ವೇದಿಕೆಯಲ್ಲಿ ಕಂಡುಬಂದರು.
ಕಾಂಗ್ರೆಸ್ ಮುಖಂಡರಾದ ಅಲಾಮ್ ಗಿರಿ ಅಲಂ ಮತ್ತು ರಾಮೇಶ್ವರ್ ಒರಾನ್, ಆರ್ ಜೆಡಿ ಶಾಸಕ ಸತ್ಯಾನಂದ ಬೊಕ್ತ ಕೂಡಾ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಜಾರ್ಖಂಡ್ ನೂತನ ಸರ್ಕಾರ ಜನಪರ ಕೆಲಸ ಮಾಡಲಿದ್ದು, ರಾಜ್ಯದಲ್ಲಿ ಶಾಂತಿ ಸೌಹಾರ್ದಯತೆ ನೆಲಸಲಿದೆ ಎಂಬ ವಿಶ್ವಾಸ ಹೊಂದಿರುವುದಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಮಂತ್ ಸೋರೆನ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ವಾರದ ಆರಂಭದಲ್ಲಿ ನಡೆದ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ- ಕಾಂಗ್ರೆಸ್- ಮತ್ತು ಆರ್ ಜೆಡಿ ಮೈತ್ರಿ 47 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ರಚಿಸಿವೆ.