ಕೋಲ್ಕತಾ: ಶಾರದಾ ಚಿಟ್ ಫಂಡ್ ಮತ್ತು ರೋಸ್ ವ್ಯಾಲಿ ಪಾಂಝಿ ಹಗರಣದ ವಿಚಾರಣೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ತಮಗೆ ತನಿಖೆ ನಡೆಸಲು ಸಹಕಾರ ನೀಡುತ್ತಿಲ್ಲ. ಹೀಗಾಗಿ ನಾವು ಮಮತಾ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದೇವೆ ಎಂದು ಸಿಬಿಐ ಹೇಳಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಿಬಿಐ ಹಂಗಾಮಿ ನಿರ್ದೇಶಕ ನಾಗೇಶ್ವರ ರಾವ್ ಅವರು, ಶಾರದಾ ಚಿಟ್ ಫಂಡ್ ಮತ್ತು ರೋಸ್ ವ್ಯಾಲಿ ಪಾಂಝಿ ಹಗರಣದ ವಿಚಾರಣೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ತಮಗೆ ತನಿಖೆ ನಡೆಸಲು ಸಹಕಾರ ನೀಡುತ್ತಿಲ್ಲ. ಉದ್ದೇಶಪೂರ್ವಕವಾಗಿ ನಮ್ಮನ್ನು ತಡೆಯುವ ಪ್ರಯತ್ನ ಮಾಡಲಾಗುತ್ತಿದ್ದು, ಸಾಕ್ಷ್ಯ ನಾಶ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ನಿನ್ನೆ ಈ ಪ್ರಕರಣ ಸಂಬಂಧ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರ ಮೇಲೆ ರೇಡ್ ಮಾಡಲು ಬಂದಿದ್ದ 40 ಸಿಬಿಐ ಅಧಿಕಾರಿಗಳನ್ನು ಕೋಲ್ಕತಾ ಪೊಲೀಸರು ತಡೆದಿದ್ದರು. ಯಾವುದೇ ಪೂರ್ವಾನುಮತಿ ಇಲ್ಲದೆಯೇ, ಅಥವಾ ಸರಿಯಾದ ದಾಖಲೆ ಇಲ್ಲದೆಯೇ ರೇಡ್ ಮಾಡಲು ಬಂದಿದ್ದಕ್ಕೆ ಆಕ್ಷೇಪಿಸಿದ್ದರು. ನಂತರ, ಸಿಬಿಐ ಅಧಿಕಾರಿಗಳನ್ನು ಪೊಲೀಸ್ ಠಾಣೆಗೆ ಬಲವಂತವಾಗಿ ಕರೆದೊಯ್ಯಲಾಯಿತು.
ಆದರೆ, ಪ್ರಕರಣದಲ್ಲಿ ತಮಗೆ ತನಿಖೆ ನಡೆಸಲು ಸಹಕಾರ ಕೊಡುತ್ತಿಲ್ಲ. ಸಾಕ್ಷ್ಯ ನಾಶ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಿಬಿಐ ಇಂದು ಸರ್ವೋಚ್ಚ ನ್ಯಾಯಾಲಯದಲ್ಲಿ ದೂರು ಸಲ್ಲಿಸಲಿದೆ. ರೋಸ್ ವ್ಯಾಲಿ ಹಾಗೂ ಶಾರದಾ ಚಿಟ್ಫಂಡ್ ಹಗರಣಗಳಲ್ಲಿ ಕೋಲ್ಕತಾ ಪೊಲೀಸರಿಂದ ಸಾಕ್ಷ್ಯನಾಶ ಮಾಡಿದ್ದಾರೆ. ಕೋಲ್ಕತಾ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಅವರು ಈ ಸಾಕ್ಷ್ಯನಾಶಕ್ಕೆ ಬೆನ್ನೆಲುಬಾಗಿದ್ದಾರೆ ಎಂದು ಹಂಗಾಮಿ ಸಿಬಿಐ ನಿರ್ದೇಶಕ ಎಂ. ನಾಗೇಶ್ವರ್ ರಾವ್ ಆರೋಪಿಸಿದ್ದಾರೆ.