ಕೊಲ್ಕತಾ: ಪಶ್ಚಿಮ ಬಂಗಾಳದ ಪೊಲೀಸ್ ವರ್ಸಸ್ ಸಿಬಿಐ ಹೈಡ್ರಾಮ ಮತ್ತೊಂದು ತಿರುವು ಪಡೆದಿದ್ದು, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಸಿಬಿಐ ವಿರುದ್ಧ ಕೊಲ್ಕತಾ ಹೈಕೋರ್ಟ್ನಲ್ಲಿ ದೂರು ದಾಖಲಿಸುವ ಮೂಲಕ ಪಶ್ಚಿಮ ಬಂಗಾಳ ಪೊಲೀಸರು ತಿರುಗೇಟು ನೀಡಿದ್ದಾರೆ.
ಕೋಲ್ಕತಾ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಮನೆಗೆ ಸಿಬಿಐ ಅಧಿಕಾರಿಗಳು ಮುತ್ತಿಗೆ ಹಾಕಿದ ನಂತರ ಕೊಲ್ಕತಾದಲ್ಲಿ ನಡೆಯುತ್ತಿರುವ ಹೈಡ್ರಾಮಕ್ಕೆ ಹೊಸ ತಿರುವು ಸಿಕ್ಕಿದ್ದು, ಸಿಬಿಐಗೆ ತಿರುಗು ಬಾಣ ಹೂಡಿರುವ ಪಶ್ಚಿಮ ಬಂಗಾಳ ಪೊಲೀಸರು ಕೊಲ್ಕತಾದ ಸಿಬಿಐ ಮುಖ್ಯಸ್ಥ ಪಂಕಜ್ ಕುಮಾರ್ ಶ್ರೀವಾಸ್ತವ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. 2018ರಲ್ಲಿ ಇಬ್ಬರು ಉದ್ಯಮಿಗಳನ್ನು ಅನಧಿಕೃತವಾಗಿ ವಶದಲ್ಲಿಟ್ಟುಕೊಂಡಿದ್ದ ಮತ್ತು ಕಟ್ಟಿಹಾಕಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀವಾಸ್ತವ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಶ್ರೀವಾಸ್ತವ್ ಅವರಿಗೆ ನೀಡಿರುವ ನೋಟಿಸ್ನಲ್ಲಿ ಉದ್ಯಮಿಗಳನ್ನು ಅನಧಿಕೃತವಾಗಿ ವಶದಲ್ಲಿರಿಸಿಕೊಂಡಿದ್ದ ಬಗ್ಗೆ ಮಾಹಿತಿಯನ್ನು ನೀಡಬೇಕು. ಹಾಗೇ, 2018ರ ಆಗಸ್ಟ್ 17 ಮತ್ತು 18ರ ನಿಜಾಮ್ ಪ್ಯಾಲೇಸ್ನ ಸಿಬಿಐ (ಎಸಿಬಿ) ಸಿಸಿಟಿವಿ ದೃಶ್ಯಾವಳಿಯನ್ನು ನೀಡಬೇಕು. ಈ ಬಗ್ಗೆ ಕಳೆದ ವರ್ಷವೇ ವಿವರ ನೀಡುವಂತೆ ಕೇಳಿದ್ದರೂ ನಿಮ್ಮಿಂದ ಇದುವರೆಗೂ ಯಾವ ಪ್ರತಿಕ್ರಿಯೆಯೂ ಬಂದಿಲ್ಲ ಎಂದು ನಮೂದಿಸಲಾಗಿದೆ.
ಇನ್ನು ನಿನ್ನೆ ತಮ್ಮ ಸರ್ಕಾರದ ನಿರ್ದೇಶನದ ಹೊರತಾಗಿಯೂ ಯಾವುದೇ ಮುನ್ಸೂಚನೆ ನೀಡದೆ ರಾಜ್ಯದೊಳಗೆ ಪ್ರವೇಶಿಸಿ ಪೊಲೀಸ್ ಕಮಿಷನರ್ ಅವರನ್ನು ವಿಚಾರಣೆ ನಡೆಸಲು ಮುಂದಾಗಿದ್ದ ಸಿಬಿಐ ಅಧಿಕಾರಿಗಳನ್ನು ಪಶ್ಚಿಮ ಬಂಗಾಳದ ಪೊಲೀಸರು ವಶಕ್ಕೆ ಪಡೆದಿದ್ದರು. ನಂತರ, ಸಿಎಂ ಮಮತಾ ಬ್ಯಾನರ್ಜಿ ತಮ್ಮ ಬೆಂಬಲಿಗರೊಂದಿಗೆ ಕೇಂದ್ರ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿಗೆ ಕುಳಿತಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos