ಲಖನೌ: ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಕಳ್ಳಬಟ್ಟಿ ಸಾರಾಯಿ ಸೇವಿಸಿ ಮೃತಪಟ್ಟವರ ಸಂಖ್ಯೆ ಶನಿವಾರ 94ಕ್ಕೆ ಏರಿಕೆಯಾಗಿದ್ದು, ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ.
ಉತ್ತರ ಪ್ರದೇಶದ ಶಹರಣಪುರ ಮತ್ತು ಕುಶಿನಗರ ಜಿಲ್ಲೆಗಳಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು ಇದುವರೆಗ 64 ಮಂದಿ ಮೃತಪಟ್ಟಿದ್ದು, ಉತ್ತರಾಖಂಡದ ರೂರ್ಕಿ - ಹರಿದ್ವಾರದಲ್ಲಿ 30ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ.
ಮೌನಿ ಅಮವ್ಯಾಸೆ ದಿನ ಎರಡು ರಾಜ್ಯಗಳಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು ನೂರಕ್ಕೂ ಹೆಚ್ಚು ಜನ ತೀವ್ರ ಅಸ್ವಸ್ಥಗೊಂಡಿದ್ದು, ಅವರಲ್ಲಿ ಅನೇಕರ ಸ್ಥಿತಿ ಗಂಭೀರವಾಗಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ಶಹರಣಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎರಡು ಡಜನ್ ಗೂ ಹೆಚ್ಚು ಮಂದಿಯನ್ನು ಮೀರತ್ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 18 ಮಂದಿ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಉತ್ತರ ಪ್ರದೇಶ ಪೊಲೀಸರು ಇದುವರೆಗೆ 39 ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿಗಳ ವಿರುದ್ಧ ಎನ್ಎಸ್ಎ ಕಾಯ್ದೆ ಅಡಿ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ.
ಕಳ್ಖಬಟ್ಟಿ ಸಾರಾಯಿಗೆ ಮೆಥನಾಲ್ ವಿಷ ಹಾಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಧಾರ್ಮಿಕ ಸ್ಥಳಗಳಲ್ಲಿ ಬಟ್ಟಿ ಸಾರಾಯಿ ಸೇವಿಸದಂತೆ ಜನತೆಗೆ ಸೂಚಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ದಾರುಣ ಘಟನೆ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಅಸ್ವಸ್ಥರಿಗೆ ತಕ್ಷಣವೇ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ಸೂಚಿಸಿದ್ದಾರೆ. ಅಲ್ಲದೆ ಸಂತ್ರಸ್ತರ ರಕ್ತ ಸಂಬಂಧಿಗಳಿಗೆ ತಲಾ 2 ಲಕ್ಷ ರುಪಾಯಿಗಳು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರ ಸಂಬಂಧಿಗಳಿಗೆ ತಲಾ 50 ಸಾವಿರ ರುಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos