ನವದೆಹಲಿ: 16 ನೇ ಲೋಕಸಭೆ ಅಧಿವೇಶನ ಮುಕ್ತಾಯಗೊಳ್ಳುತ್ತಿದ್ದಂತೆಯೇ ಇತ್ತ ನವದೆಹಲಿಯಲ್ಲಿ ವಿಪಕ್ಷಗಳ ನಾಯಕರು ಸಭೆ ನಡೆಸಿದ್ದು, ಬಿಜೆಪಿಯನ್ನು ಮಣಿಸುವುದೇ ನಮ್ಮೆಲ್ಲರ ಸಮಾನ ಉದ್ದೇಶ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ನಿವಾಸದಲ್ಲಿ ನಡೆದ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿರುವ ರಾಹುಲ್ ಗಾಂಧಿ, ಎಲ್ಲಾ ವಿಪಕ್ಷಗಳ ನಾಯಕರಿಗೂ ಒಂದೇ ಉದ್ದೇಶವಿದ್ದು ಅದು ಬಿಜೆಪಿಯನ್ನು ಮಣಿಸುವುದಾಗಿದೆ. ಇದಕ್ಕೆ ಎಲ್ಲರೂ ಒಗ್ಗಟ್ಟಾಗಿದ್ದಾರೆ, ಎಲ್ಲರೂ ಒಟ್ಟಿಗೆ ಕೆಲಸ ಮಾಡಲಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರಾಹುಲ್ ಗಾಂಧಿ ಜೊತೆ ಕಾಣಿಸಿಕೊಂಡಿದ್ದಾರೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿಪಕ್ಷಗಳ ನಾಯಕರ ಸಭೆಯನ್ನು ಫಲಪ್ರದ ಎಂದು ಬಣ್ಣಿಸಿದ್ದು, ಚುನಾವಣಾ ಪೂರ್ವ ಮೈತ್ರಿ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.