ನವದೆಹಲಿ:ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಕಾಶ್ಮೀರದ ಯುವಕರ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಕೋಮು ಸೌಹಾರ್ದತೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ತಮ್ಮದೇ ಆದ ರಾಜಕೀಯ ಪಕ್ಷದವರೂ ಈ ರೀತಿಯಲ್ಲಿ ತೊಡಗಿಸಿಕೊಂಡಿದ್ದರೂ ಕೂಡಾ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ ಎನ್ನಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಯುವಕರಿಗೆ ಕಿರುಕುಳ , ಬೆದರಿಕೆ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದ ನಂತರ ಆ ರಾಜ್ಯದಿಂದ ಬಂದಿರುವ ಎಲ್ಲ ಜನರಿಗೂ ಅಗತ್ಯ ಸುರಕ್ಷತೆ ಒದಗಿಸುವಂತೆ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ಹರಿಯಾಣದ ಮುಲಾನಾ ಪಂಚಾಯತ್ ನ ಹಳ್ಳಿಯೊಂದರಲ್ಲಿ ಸುಮಾರು 125 ಕಾಶ್ಮೀರಿ ವಿದ್ಯಾರ್ಥಿಗಳು ವಾಸಿಸುತ್ತಿದ್ದು, ಅವರನ್ನು ಹೊರಹಾಕುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕಾಲೇಜಿನ ಡೀನ್ ನೀಡಿದ ದೂರಿನ ನಂತರ ಹಿಮಾಚಲ ಪ್ರದೇಶದಲ್ಲಿ ದ್ವೀತಿಯ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ತಾಸೇನ್ ಗುಲ್ ಎಂಬವರನ್ನು ಬಂಧಿಸಲಾಗಿತ್ತು.