ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪುಲ್ವಾಮ ದಾಳಿಯ ಬಗ್ಗೆ ಪ್ರಶ್ನೆ ಮಾಡಿದ್ದು, ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಈ ರೀತಿಯ ದಾಳಿ ನಡೆದಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಮತಾ ಬ್ಯಾನರ್ಜಿ, ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಈ ರೀತಿಯ ಭೀಭತ್ಸ ದಾಳಿ ನಡೆದಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
ಚುನಾವಣೆಗೂ ಮುನ್ನ ಈ ರೀತಿಯ ದಾಳಿಯ ಮೂಲಕ ಕೋಮು ಸೌಹಾರ್ದತೆ ಕದಡಲು ಯತ್ನಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಕಳೆದ 5 ವರ್ಷದಿಂದ ಏಕೆ ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಂಡಿಲ್ಲ. ಎನ್ಎಸ್ಎ ಹಾಗೂ ಗುಪ್ತಚರ ಇಲಾಖೆ ಏನನ್ನು ಮಾಡುತ್ತಿವೆ ಎಂದು ಜನ ಕೇಳುತ್ತಿದ್ದಾರೆ. ಪುಲ್ವಾಮ ದಾಳಿ ಗುಪ್ತಚರ ಇಲಾಖೆಯ ವೈಫಲ್ಯ. ಅಪಾಯ ಇದ್ದರೂ ಸಹ ಸಿಆರ್ ಪಿಎಫ್ ನ 78 ವಾಹನಗಳು ಹೋಗಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.
ಪುಲ್ವಾಮ ದಾಳಿಯನ್ನು ಖಂಡಿಸಿ ಕ್ಯಾಂಡಲ್ ಲೈಟ್ ಪ್ರತಿಭಟನೆ ನಡೆಸಿದ ಬೆನ್ನಲ್ಲೆ ಮಮತಾ ಬ್ಯಾನರ್ಜಿ ಈ ಹೇಳಿಕೆ ನೀಡಿದ್ದಾರೆ.