ಬೆಂಗಳೂರಿನಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
ನವದೆಹಲಿ: ಕಾರ್ಮಿಕ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಎರಡು ದಿನಗಳ ಭಾರತ್ ಬಂದ್ ಗೆ ಮೊದಲ ದಿನ ಬಹುತೇಕ ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇರಳ, ಒಡಿಶಾ ಮತ್ತು ಅಸ್ಸಾಂ ಸೇರಿದಂತೆ ಐದು ರಾಜ್ಯಗಳಲ್ಲಿ ಮಾತ್ರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದೇವರ ನಾಡು ಸಂಪೂರ್ಣ ಸ್ತಬ್ಧಗೊಂಡಿತ್ತು.
ಪಶ್ಚಿಮ ಬಂಗಾಳ ಮತ್ತು ರಾಜಸ್ತಾನದಲ್ಲಿ ಕೆಲವು ಅಹಿತಕರ ಘಟನೆಗಳು ವರದಿಯಾಗಿದ್ದು, ಉಳಿದಂತೆ ಬಂದ್ ಬಹುತೇಕ ಶಾಂತಿಯುತವಾಗಿತ್ತು.
ಮೋಟಾರು ವಾಹನ ಕಾಯ್ದೆ ಹಿಂದಕ್ಕೆ ಪಡೆಯಬೇಕು ಮತ್ತು ಅಸಂಘಟಿತ ವಲಯದ ಸಾರಿಗೆ ಕಾರ್ಮಿಕರಿಗೆ ಸುರಕ್ಷತಾ ಕಾಯ್ದೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕೇಂದ್ರದ 10 ಕಾರ್ಮಿಕ ಸಂಘಟನೆಗಳು ಇಂದು ಮತ್ತು ನಾಳೆ ಭಾರತ್ ಬಂದ್ ಗೆ ಕರೆ ನೀಡಿವೆ. ಆದರೆ ಮೊದಲ ದಿನದ ಪ್ರತಿಕ್ರಿಯೆಯನ್ನು ಗಮನಿಸಿದರೆ ಬುಧವಾರ ಪ್ರತಿಭಟನೆ ಕೂಡ ನಡೆಯುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.
ಬಂದ್ ನಿಂದಾಗಿ ಕೆಲವು ರಾಜ್ಯಗಳಲ್ಲಿ ಜನ ಜೀವನ ಅಸ್ತವ್ಯಸ್ಥವಾಗಿತ್ತು. ಇನ್ನು ಕೆಲವು ರಾಜ್ಯಗಳಲ್ಲಿ ಜನಜೀವನ ಎಂದಿನಂತೆ ಇತ್ತು. ಇನ್ನು ಕರ್ನಾಟಕದಲ್ಲೂ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪಶ್ಚಿಮ ಬಂಗಾಳದಲ್ಲಿ ಕೆಲವು ಅಹಿತಕರ ಘಟನೆಗಳು ನಡೆದಿದ್ದು, ಉತ್ತರ 24 ಪರಾಗಣ ಜಿಲ್ಲೆಯಲ್ಲಿ ಬರಸಾತ್ ನಲ್ಲಿ ಶಾಲಾ ವಾಹನದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ ಸರ್ಕಾರಿ ಬಸ್ ವೊಂದನ್ನು ಧ್ವಂಸಗೊಳಿಸಿದ್ದು, ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos