ಕೋಲ್ಕತ್ತ: ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್ ಡಿಎ ಸರ್ಕಾರದ ವಿರುದ್ಧ ಮತ್ತೆ ವಿಪಕ್ಷಗಳು ತೊಡೆ ತಟ್ಟಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲಿ ನಡೆದ ಮೆಗಾ ರ್ಯಾಲಿಯಲ್ಲಿ ಪರಸ್ಪರ ಕೈ ಜೋಡಿಸಿ ಮೋದಿ ವಿರುದ್ಧ ಅಬ್ಬರಿಸಿದ್ದಾರೆ.
ಅತ್ತ ಗುಜರಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಯುದ್ಧ ಸಾಮಗ್ರಿಗಳ ವೀಕ್ಷಿಸುತ್ತಿದ್ದರೆ, ಇತ್ತ ಕೋಲ್ಕತ್ತದಲ್ಲಿ ಲಕ್ಷಾಂತರ ಕಾರ್ಯಕರ್ತರ ಹರ್ಷೋದ್ಘಾರಗಳ ನಡುವೆ ವಿರೋಧ ಪಕ್ಷಗಳು ನಾಯಕರು ಮೋದಿ ವಿರುದ್ಧ ಅಬ್ಬರಿಸಿದ್ದಾರೆ. ಟಿಎಂಸಿ ನಾಯಕಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಯೋಜಿಸಿದ್ದ ರ್ಯಾಲಿಯಲ್ಲಿ ನಿರೀಕ್ಷೆಯಂತೆ 20ಕ್ಕೂ ಹೆಚ್ಚು ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು.
ರ್ಯಾಲಿಯಲ್ಲಿ ಐದು ಲಕ್ಷ ಜನರು ಭಾಗವಹಿಸಿದ್ದು, ಈ ಮೆಗಾ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಜೆಡಿಯು ಉಚ್ಛಾಟಿತ ನಾಯಕ ಶರದ್ ಯಾದವ್, ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್, ಆರ್ ಜೆಡಿ ನಾಯಕ ತೇಜಸ್ವಿ ಯಾದವ್, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ನ್ಯಾಷನಲ್ ಕಾನ್ಫೆರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ, ಕಾಂಗ್ರೆಸ್ನ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ಇನ್ನು ನಿರೀಕ್ಷೆಯಂತೆಯೇ ಬಿಜೆಪಿಯ ರೆಬೆಲ್ ಸಂಸದ ಶತ್ರುಘ್ನ ಸಿನ್ಹಾ ಮತ್ತು ಬಂಡಾಯ ನಾಯಕರಾದ ಯಶವಂತ್ ಸಿನ್ಹಾ ಮತ್ತು ಅರುಣ್ ಶೌರಿ ವೇದಿಕೆಯಲ್ಲಿದ್ದದು, ವಿಶೇಷವಾಗಿತ್ತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, 'ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತೀಯ ಏಕತಾ ರ್ಯಾಲಿಗೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಭ ಕೋರಿದ್ದಾರೆ ಎಂದು ತಿಳಿಸಿದರು. ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳನ್ನು ಮರು ಸ್ಥಾಪಿಸುವ ದಿಸೆಯಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಲಿದೆ ಎಂದರು.
ಇನ್ನು ಈ ಮೆಗಾ ರ್ಯಾಲಿಯಿಂದ ಎಡ ಪಕ್ಷಗಳು, ಟಿಆರ್ಎಸ್ ನಾಯಕ ಕೆ. ಚಂದ್ರಶೇಖರ್ ರಾವ್, ಬಿಜೆಡಿ ನಾಯಕ ನವೀನ್ ಪಟ್ನಾಯಕ್, ವೈಎಸ್ಆರ್ ಕಾಂಗ್ರೆಸ್ ನಾಯಕ ಜಗನ್ ಮೋಹನ್ ರೆಡ್ಡಿ ಭಾಗವಹಿಸಿರಲಿಲ್ಲ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos