ನವದೆಹಲಿ: ಮೈಸೂರಿನ ವರುಣ ಕ್ಷೇತ್ರದಲ್ಲಿ ಜನರ ಸಮಸ್ಯೆ ಆಲಿಸುತ್ತಿದ್ದ ವೇಳೆ ತಮ್ಮನ್ನು ಪ್ರಶ್ನಿಸಿದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗ ಸೋಮವಾರ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.
ಇಂದು ಸಾರ್ವಜನಿಕರೊಂದಿಗೆ ಸಭೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದರು. ಈ ಸಂದರ್ಭದಲ್ಲಿ ಸಿಟ್ಟಿಗೆದ್ದ ಸಿದ್ದರಾಮಯ್ಯ ಅವರು ಮಹಿಳೆಯ ಬಳಿಯಿದ್ದ ಮೈಕ್ ಕಿತ್ತುಕೊಂಡು, ಆವಾಜ್ ಹಾಕಿದ್ದರು. ಘಟನೆಯ ವಿಡಿಯೋ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸಿದ್ದರಾಮಯ್ಯ ಅವರ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಕರ್ನಾಟಕ ಪೊಲೀಸರಿಗೆ ರಾಷ್ಟ್ರೀಯ ಮಹಿಳಾ ಆಯೋಗ(ಎನ್ಸಿಡಬ್ಲ್ಯೂ)ದ ಅಧ್ಯಕ್ಷೆ ರೇಖಾ ಶರ್ಮಾ ಅವರು ಪತ್ರ ಬರೆದಿದ್ದಾರೆ.
ಇಂದು ವರುಣ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾರ್ಯಕರ್ತೆಯೊಬ್ಬರ ದೀರ್ಘ ಭಾಷಣವನ್ನು ನಿಲ್ಲಿಸಲು ಪ್ರಯತ್ನಿಸುವಾಗ ನಡೆದ ಘಟನೆ ಆಕಸ್ಮಿಕವಾದುದು, ಅದರಲ್ಲಿ ದುರುದ್ದೇಶ ಇರಲಿಲ್ಲ. 15 ವರ್ಷಗಳಿಂದ ನಾನು ಬಲ್ಲ ಆ ಕಾರ್ಯಕರ್ತೆ ನನ್ನಸಹೋದರಿ ಸಮಾನ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos