ನವದೆಹಲಿ: ಕೃಷಿ ಕ್ಷೇತ್ರದ ಬೆಳವಣಿಗೆ ಕುಂಠಿತವಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳನ್ನೊಳಗೊಂಡ ಉನ್ನತಾಧಿಕಾರ ಸಮಿತಿ ರಚಿಸಿದೆ.
ದೇಶದ ಕೃಷಿ ವಲಯದ ಆದಾಯ ಹೆಚ್ಚಳ, ರೈತರ ಜೀವನ ಮಟ್ಟ ಸುಧಾರಣೆಗಾಗಿ ಈ ಸಮಿತಿ ರಚಿಸಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಸಮಿತಿಯ ಸಂಚಾಲಕರಾಗಿ ನೇಮಿಸಲಾಗಿದೆ.
ಕರ್ನಾಟಕ, ಹರಿಯಾಣ, ಅರುಣಾಚಲ ಪ್ರದೇಶ, ಗುಜರಾತ್, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿಗಳು ಸಮಿತಿ ಸದಸ್ಯರಾಗಿದ್ದಾರೆ.
ಕುಸಿತವಾಗುತ್ತಿರುವ ಕೃಷಿ ಕ್ಷೇತ್ರದ ಪ್ರಗತಿಯನ್ನು ಪ್ರಧಾನ ಆದ್ಯತೆಯಾಗಿಟ್ಟುಕೊಂಡು ಈ ಸಮಿತಿ ರಚಿಸಲಾಗಿದೆ. ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ, ಸಾಂಪ್ರದಾಯಿಕ ಕೃಷಿ ಪದ್ಧತಿಯ ಜತೆಗೆ ಸಾವಯವ ಕೃಷಿಗೆ ಒತ್ತು ನೀಡುವ ಹತ್ತು ಹಲವು ಅಂಶಗಳ ಬಗ್ಗೆ ಈ ಸಮಿತಿ ಪರಮಾರ್ಶೆ ನಡೆಸಿ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಲಿದೆ.
ಎರಡು ತಿಂಗಳಲ್ಲಿ ತನ್ನ ವರದಿ ಸಲ್ಲಿಸುವಂತೆ ಸಮಿತಿಗೆ ಈಗಾಗಲೇ ಸೂಚಿಸಲಾಗಿದೆ. ಕೃಷಿ ವಲಯದ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಮಾನದಂಡಗಳ ಬಗ್ಗೆ ಸಮಿತಿ ನೀಡುವ ಸಲಹೆ ಆಧಾರದ ಮೇಲೆ ಕೇಂದ್ರ ಸರ್ಕಾರ ಮುಂದಿನ ಕಾರ್ಯ ಯೋಜನೆಯನ್ನು ರೂಪಿಸಲಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos