ಪಂಜಾಬ್ : ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿರುವುದು ದುರದೃಷ್ಟಕರ ಸಂಗತಿಯಾಗಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ಬಿಸಿ ರಕ್ತದ ಯುವಕರನ್ನು ನೇಮಕ ಮಾಡಬೇಕೆಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರಿಂದ ತೆರವಾಗುವ ಸ್ಥಾನಕ್ಕೆ ವರ್ಚಸ್ಸು ಹೊಂದಿರುವ ಹಾಗೂ ಸ್ಥಳೀಯ ಮಟ್ಟದಲ್ಲೂ ಗುರುತಿಸುವಂತಹ ದೇಶಾದ್ಯಂತ ಜನರಿಗೆ ಸ್ಪಂದಿಸುವಂತಹ ಉತ್ಸಾಹಿ ಯುವ ನಾಯಕರನ್ನು ನೇಮಿಸಬೇಕಾಗಿದೆ ಎಂದು ಅಮರೀಂದರ್ ಸಿಂಗ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಬಳಿ ಮನವಿ ಮಾಡಿಕೊಂಡಿದ್ದಾರೆ.
ಎಐಸಿಸಿ ಅಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅಥವಾ ಸುಶೀಲ್ ಕುಮಾರ್ ಶಿಂಧೆ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.
77 ವರ್ಷದ ಶಿಂಧೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದು,2002ರಲ್ಲಿ ಪಕ್ಷದ ಉಪಾಧ್ಯಕ್ಷರಾಗಿ ನಾಮನಿರ್ದೇಶನ ಗೊಂಡಿದ್ದರು. 76 ವರ್ಷದ ಮಲ್ಲಿಕಾರ್ಜುನ ಖರ್ಗೆ, ದಶಕಗಳಿಂದಲೂ ಗಾಂಧಿ ಕುಟುಂಬದ ನಿಷ್ಠರಾಗಿದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಕೂಡಾ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.