ಗುವಾಹತಿ: ಅಸ್ಸಾಂನಲ್ಲಿ ಕಳೆದೊಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಅಸ್ಸಾಂ ಮತ್ತು ಬಿಹಾರದಲ್ಲಿ ಸಾವಿಗೀಡಾದವರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ.
ಭೀಕರ ಮಳೆಗೆ ಉತ್ತರ ಭಾರತ ತತ್ತರಿಸಿ ಹೋಗಿದ್ದು, ಅಸ್ಸಾಂ ಮತ್ತು ಬಿಹಾರದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಅಸ್ಸಾಂನ 33 ಜಿಲ್ಲೆಗಳು ಮತ್ತು ಬಿಹಾರದ 28 ಜಿಲ್ಲೆಗಳಲ್ಲಿ ಪ್ರವಾಹ ಉಲ್ಬಣಗೊಂಡಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಬಿಹಾರವೊಂದರಲ್ಲೇ ಈ ವರೆಗೂ ಸುಮಾರು 78 ಮಂದಿ ಸಾವನ್ನಪ್ಪಿದ್ದು, ಸೀತಾಮಾರ್ಗಿ ಜಿಲ್ಲೆಯೊಂದರಲ್ಲೇ ಗರಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ ಮಧುಬನಿಯಲ್ಲಿ 14, ಅರಾರಿಯಾದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಸ್ಸಾಂ ಮತ್ತು ಬಿಹಾರದಲ್ಲಿ ಈ ವರೆಗೂ ಸುಮಾರು 54 ಲಕ್ಷ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ರವಾನೆ ಮಾಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಬ್ರಹ್ಮಪುತ್ರ ನದಿಯಲ್ಲಿ ಒಳಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದು, ಒಂದೇ ದಿನದಲ್ಲಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮ ನದಿಯ ತಡದಲ್ಲಿನ ಪ್ರದೇಶಗಳಲ್ಲಿದ್ದ ಸುಮಾರು 4000 ಮನೆಗಳು ಪ್ರವಾಹದಲ್ಲಿ ಮುಳುಗಡೆಯಾಗಿವೆ. ಎನ್ ಡಿಆರ್ ಎಫ್ ಮತ್ತು ಎಸ್ ಡಿಆರ್ ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos