ನವದೆಹಲಿ: ಲೋಕಸಭೆಯಲ್ಲಿ ಗುರುವಾರ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ ಮಸೂದೆ 2019ರ ಚರ್ಚೆಯ ವೇಳೆ ಎಂಐಎಂ ಸದಸ್ಯ ಅಸಾದುದ್ದೀನ್ ಒವೈಸಿ, ಬಿಜೆಪಿ ಸಂಸದೆಯರನ್ನು ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಕರೆದುಕೊಂಡು ಹೋಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.
ಕಾನೂನಿನ ವಿಷಯದಲ್ಲಿ ದ್ವಿಮುಖ ನೀತಿ ಸಲ್ಲದು ಮುಸ್ಲಿಂ ಮಹಿಳೆಯರಿಗೆ ನ್ಯಾಯ, ಗೌರವ ಒದಗಿಸಲು ತ್ರಿವಳಿ ತಲಾಖ್ ಮಸೂದೆ ರೂಪಿಸಲಾಗಿದೆ ಎಂದು ಆಡಳಿತ ಸರ್ಕಾರ ಹೇಳಿಕೊಳ್ಳುತ್ತಿದೆ ಹೀಗಿರುವಾಗ, ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿದ್ದೇಕೆ? ಬಿಜೆಪಿ ಮಹಿಳಾ ಸಂಸದರನ್ನು ಪ್ರಧಾನಿ ನರೇಂದ್ರ ಮೋದಿ ಈಗಲೇ ವಿಶೇಷ ವಿಮಾನದಲ್ಲಿ ಕರೆದುಕೊಂಡು ಹೋಗಲಿ ಎಂದರು.
ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ 10 ರಿಂದ 50 ವರ್ಷದೊಳಿಗಿನ ಮಹಿಳೆಯರೂ ಪ್ರವೇಶಿಸಬಹುದು ಎಂದು ಸ್ವತಃ ಸುಪ್ರೀಂಕೋರ್ಟ್ ಆದೇಶವಿದ್ದರೂ, ವಿರೋಧಿಸುತ್ತಿರುವ ಬಿಜೆಪಿ, ತ್ರಿವಳಿ ತಲಾಖ್ ಮೂಲಕ ಮುಸ್ಲಿಂ ಮಹಿಳೆಯರ ಬಗ್ಗೆ ತನ್ನ ಕಾಳಜಿ ಪ್ರದರ್ಶಿಸುತ್ತಿದೆ ಎಂದು ಟೀಕಿಸಿದರು.
ಇದಕ್ಕೂ ಮುನ್ನ ತ್ರಿವಳಿ ತಲಾಖ್ ತಿದ್ದುಪಡಿ ಮಸೂದೆ ಮಂಡಿಸಿದ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಸುಪ್ರೀಂ ಕೋರ್ಟ್ ತೀರ್ಪಿನ ಆಧಾರದ ಮೇಲೆ ಮಸೂದೆಯನ್ನು ತರಲಾಗುತ್ತಿದೆ ಎಂದರು.
ಆದರೆ, ಕಿಶನ್ ಗಂಜ್ ಕ್ಷೇತ್ರದ ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ 'ತಲಾಕ್' ಹೇಳುವುದು ಕ್ರಿಮಿನಲ್ ಅಪರಾಧ ಎಂದು ಸುಪ್ರೀಂ ಕೋರ್ಟ್ ಎಲ್ಲಿಯೂ ಹೇಳಿಲ್ಲ ಎಂದು ಕಿಡಿಕಾರಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos