ದೇಶ

ಅಜಿತ್ ದೋವಲ್ ಭೇಟಿ ಬಳಿಕ ಕಾಶ್ಮೀರದಲ್ಲಿ 10 ಸಾವಿರ ಹೆಚ್ಚುವರಿ ಸೈನಿಕರ ನಿಯೋಜನೆ

Lingaraj Badiger
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಗೆ ನೆರವು ನೀಡುವುದಕ್ಕಾಗಿ ಕೇಂದ್ರ ಸರ್ಕಾರ ಕಣಿವೆ ರಾಜ್ಯದಲ್ಲಿ ಹೆಚ್ಚುವರಿಯಾಗಿ 10 ಸಾವಿರ ಅರೆ ಸೇನಾಪಡೆಯನ್ನು ನಿಯೋಜಿಸಿದೆ.
ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಮತ್ತು ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ಬಲಗೊಳಿಸಲು ಹೆಚ್ಚುವರಿ 10 ಸಾವಿರ ಯೋಧರನ್ನು ನಿಯೋಜಿಸುತ್ತಿರುವುದಾಗಿ ಕೇಂದ್ರ ಗೃಹ ಇಲಾಖೆ ಕಾಶ್ಮೀರ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿದೆ.
ಗೃಹ ಇಲಾಖೆ ಆದೇಶದ ಮೇರೆಗೆ ಸಿಆರ್​ಪಿಎಫ್​ನ 50, ಎಸ್ಎಸ್ ಬಿಯ 30 ಹಾಗೂ ಬಿಎಸ್ ಎಫ್ ಮತ್ತು ಐಟಿಬಿಪಿಯ ತಲಾ 10 ತುಕಡಿಗಳನ್ನು ಕಾಶ್ಮೀರ ಕಣಿವೆಯಲ್ಲಿ ನಿಯೋಜಿಸಲಾಗಿದೆ. ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಹೆಚ್ಚುವರಿ ಸೈನಿಕರನ್ನು ನಿಯೋಜಿಸಲಾಗಿದೆ ಎಂದು ಸಹ ಕೇಂದ್ರ ಸರ್ಕಾರ ತಿಳಿಸಿದೆ.
ರಾಷ್ಟ್ರಪತಿ ಆಡಳಿತದಲ್ಲಿರುವ ಜಮ್ಮು ಮತ್ತು ಕಾಶ್ಮೀರಕ್ಕೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಇತ್ತಿಚೀಗೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಹೆಚ್ಚುವರಿ ಸೇನೆ ನಿಯೋಜಿಸಿರುವುದು ಸ್ಥಳೀಯ ರಾಜಕೀಯ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.
ಕೇಂದ್ರದ ಈ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪಿಡಿಪಿ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು, ಸೇನೆಯಿಂದ ಕಾಶ್ಮೀರ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ಹೇಳಿದ್ದಾರೆ.
SCROLL FOR NEXT