ದೇಶ

ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ ಪ್ರಕರಣ ಸಿಬಿಐಗೆ ವಹಿಸಲು ಮುಂದಾದ ಯುಪಿ ಸರ್ಕಾರ

Lingaraj Badiger
ಲಖನೌ: ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಯುವತಿ ಹಾಗೂ ಆಕೆಯ ವಕೀಲರು ಪ್ರಯಾಣಿಸುತ್ತಿದ್ದ ಕಾರು ಅಪಘಾತ ಪ್ರಕರಣವನ್ನು ಸಿಬಿಐಗೆ ವಹಿಸಲು ಸಿದ್ಧ ಎಂದು ಸೋಮವಾರ ಉತ್ತರ ಪ್ರದೇಶ ಸರ್ಕಾರ ಹೇಳಿದೆ.
ಅತ್ಯಾಚಾರ ಸಂತ್ರಸ್ಥೆಯ ತಾಯಿ ಅಥವಾ ಅಕೆಯ ಸಂಬಂಧಿಕರು ಯಾರಾದರೂ ಅಪಘಾತ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದರೆ ರಾಜ್ಯ ಸರ್ಕಾರ ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ ವಹಿಸಲು ಸಿದ್ಧವಿದೆ ಎಂದು ಉತ್ತರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕ ಒ ಪಿ ಸಿಂಗ್ ಅವರು ಹೇಳಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಅದು ಉದ್ದೇಶಪೂರ್ವಕ ಕೊಲೆ ಅಲ್ಲ. ಅಪಘಾತ ಎಂದು ತಿಳಿದುಬಂದಿದೆ. ಆದರೂ ಆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸಿಂಗ್ ತಿಳಿಸಿದ್ದಾರೆ.
ಬಿಜೆಪಿ ಶಾಸಕ ಕುಲದೀಪ್‌ ಸೆಂಗರ್‌ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಬಾಲಕಿ, ಆಕೆಯ ವಕೀಲ ಹಾಗೂ ಇಬ್ಬರು ಸಾಕ್ಷಿಗಳು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದರು.
ರಾಯಬರೇಲಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅತ್ಯಾಚಾರ ಸಂತ್ರಸ್ತ ಬಾಲಕಿ ಹಾಗೂ ವಕೀಲರನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಇಬ್ಬರು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಅಪಘಾತದ ಬಳಿಕ, ಇದು ಅಪಘಾತ ಅಲ್ಲ ಅತ್ಯಾಚಾರ ಸಂತ್ರಸ್ತೆಯ ಕೊಲೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಆರೋಪಿಸಿದ್ದರು. ಅಲ್ಲದೆ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದ್ದರು.
ರಾಜಕೀಯವಾಗಿಯೂ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಎಡೆಮಾಡಿಕೊಟ್ಟಿದ್ದ ಉನ್ನಾವೊ ಆತ್ಯಾಚಾರ ಪ್ರಕರಣ, ಈಗ ಅಪಘಾತದ ಹಿಂದಿನ ಕೈವಾಡದ ಬಗ್ಗೆ ಹಲವು ಸಂಶಯಗಳಿಗೆ ಆಸ್ಪದ ಮಾಡಿಕೊಟ್ಟಿದೆ. ಇದರೊಂದಿಗೆ ಬಿಜೆಪಿ ಶಾಸಕ ಕುಲದೀಪ್‌ ಸೆಂಗರ್‌ ಆರೋಪಿಯಾಗಿರುವ ಈ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು ಲಭಿಸಿದೆ.
SCROLL FOR NEXT