ನವದೆಹಲಿ: ದೆಹಲಿ ಮಹಿಳಾ ಆಯೋಗ(ಡಿಸಿಡಬ್ಲ್ಯು)ದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಬುಧವಾರ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೇನ್ ಪಟೇಲ್ ಅವರನ್ನು ಭೇಟಿ ಮಾಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉನ್ಮಾವೊ ಅತ್ಯಾಚಾರ ಸಂತ್ರಸ್ತೆಯನ್ನು ದೆಹಲಿಗೆ ಏರ್ ಲಿಫ್ಟ್ ಮಾಡುವಂತೆ ಒತ್ತಾಯಿಸಿದ್ದಾರೆ.
ಕಳೆದ ಭಾನುವಾರ ಅತ್ಯಾಚಾರ ಸಂತ್ರಸ್ತೆಯ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಹಿಳೆ ಲಖನೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಸಂತ್ರಸ್ತೆಯನ್ನು ಭೇಟಿಮಾಡಿರುವ ಸ್ವಾತಿ ಮಲಿವಾಲ್ ಅವರು, 'ಹೆಚ್ಚಿನ ಚಿಕಿತ್ಸೆಗಾಗಿ ಸಂತ್ರಸ್ತೆಯನ್ನು ದೆಹಲಿಗೆ ಕರೆದೊಯ್ಯಲಾಗುವುದು' ಎಂದು ಹೇಳಿದ್ದರು. ಅಲ್ಲದೆ ಈ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿರುವ ಸ್ವಾತಿ ಮಲಿವಾಲ್ ಅವರು, ಸಂತ್ರಸ್ತೆಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದು, ಆಕೆಯನ್ನು ದೆಹಲಿಗೆ ಕರೆದೊಯ್ಯಲು ತುರ್ತಾಗಿ ಹೆಲಿಕಾಪ್ಟರ್ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದರು.
ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ವಿಧಾಸಭೆಯಿಂದ ಅನರ್ಹಗೊಳಿಸಬೇಕು ಮತ್ತು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಮಲಿವಾಲ್ ಆಗ್ರಹಿಸಿದ್ದಾರೆ.
ಭಾನುವಾರ ಸಂಭವಿಸಿದ ಅಪಘಾತದಲ್ಲಿ ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಇಬ್ಬರು ಮೃತಪಟ್ಟಿದ್ದು, ಘಟನೆಯ ಹಿಂದೆ ಕೊಲೆ ಸಂಚು ರೂಪಿಸಲಾಗಿದೆ ಎಂದು ಆರೋಪಿಸಲಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos