ನವದೆಹಲಿ: ದಕ್ಷಿಣ ಭಾರತದ ಹಿಂದಿಯೇತರ ರಾಜ್ಯಗಳ ವಿರೋಧಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಯ ಕರಡಿನಿಂದ ಹಿಂದಿ ಕಡ್ಡಾಯ ಎಂಬ ಅಂಶವನ್ನು ಕೈ ಬಿಟ್ಟಿದೆ ಎಂದು ತಿಳುದುಬಂದಿದೆ.
ಈ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳ ವರದಿ ಮಾಡಿದ್ದು, ಹಿಂದಿಯೇತರ ರಾಜ್ಯಗಳ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹಿಂದಿಯನ್ನು ಕಡ್ಡಾಯವಾಗಿ ಕಲಿಯಬೇಕು ಎಂಬ ವಿವಾದಾತ್ಮಕ ಅಂಶವನ್ನು ರಾಷ್ಟ್ರೀಯ ಶಿಕ್ಷಣ ನೀತಿಯ ಕರಡುವಿನಿಂದ ಕೇಂದ್ರ ಸರ್ಕಾರ ಸದ್ದಿಲ್ಲದೆ ಕೈಬಿಟ್ಟಿದೆ. ಆದರೆ, ತ್ರಿಭಾಷಾ ಸೂತ್ರ ಮಾತ್ರ ಮುಂದುವರಿಯಲಿದೆ ಎನ್ನಲಾಗಿದೆ.
ಕೇಂದ್ರಸರ್ಕಾರದ ಈ ವಿವಾದಾತ್ಮಕ ನಡೆಗೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದ ದಕ್ಷಿಣ ಭಾರತದ ರಾಜ್ಯಗಳ ಹೋರಾಟಕ್ಕೆ ಕೊನೆಗೂ ಜಯ ಸಂದಿದ್ದು, ಈ ಬಾರಿಯೂ ಹಿಂದಿ ಹೇರಿಕೆ ವಿಚಾರದಲ್ಲಿ ದಕ್ಷಿಣದಲ್ಲಿ, ಅದರಲ್ಲೂ ಮುಖ್ಯವಾಗಿ ತಮಿಳುನಾಡಿನಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ದಕ್ಷಿಣ ಭಾರತದಲ್ಲಿ ಗಟ್ಟಿ ನೆಲೆ ಕಂಡುಕೊಳ್ಳಲು ಆಡಳಿತಾರೂಢ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಭಾರಿ ಪ್ರಯತ್ನ ನಡೆಸಿತ್ತು. ಆದರೆ, ಹಿಂದಿ–ಹಿಂದೂ–ಹಿಂದುತ್ವದ ಸಂದೇಶವು ಉತ್ತರ ಭಾರತದ ರೀತಿಯಲ್ಲಿ ದಕ್ಷಿಣದಲ್ಲಿ ಪರಿಣಾಮ ಬೀರಿಲ್ಲ. ಹಾಗಾಗಿ, ಭಾಷೆಯ ವಿಚಾರದಲ್ಲಿ ಉಂಟಾದ ವಿವಾದವನ್ನು ತಕ್ಷಣವೇ ಕೇಂದ್ರ ಸರ್ಕಾರವು ಪರಿಹರಿಸಿದೆ ಎನ್ನಲಾಗಿದೆ.
ಅಂತೆಯೇ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ (ಎಚ್ಆರ್ಡಿ) ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡನ್ನು ದಕ್ಷಿಣ ರಾಜ್ಯಗಳ ಪ್ರತಿರೋಧದ ಬಳಿಕ ಪರಿಷ್ಕರಿಸಲಾಗಿದೆ. ತ್ರಿಭಾಷಾ ಸೂತ್ರವನ್ನು ಅದರ ಸಂಪೂರ್ಣ ಅರ್ಥದಲ್ಲಿ ದೇಶದಾದ್ಯಂತ ಜಾರಿಗೊಳಿಸಬೇಕಾಗಿದೆ. ಬಹುಭಾಷೆಗಳ ದೇಶದಲ್ಲಿ ಜನರ ಬಹುಭಾಷಿಕ ಸಂವಹನ ಸಾಮರ್ಥ್ಯವನ್ನು ಇದು ಹೆಚ್ಚಿಸಲಿದೆ ಎಂದಷ್ಟೇ ನೀತಿಯಲ್ಲಿ ಹೇಳಲಾಗಿದೆ. ಆ ಮೂಲಕ ಹಿಂದಿಯನ್ನೇ ಕಲಿಯಬೇಕು ಎಂಬ ಅಂಶವನ್ನು ಈಗ ಕೈಬಿಡಲಾಗಿದೆ.
ಇದಕ್ಕೂ ಮೊದಲು ಪ್ರಕಟಿಸಿದ್ದ ಕರಡುವಿನಲ್ಲಿ ಹಿಂದಿ ಭಾಷಿಕ ರಾಜ್ಯಗಳು ಮತ್ತು ಹಿಂದಿಯೇತರ ರಾಜ್ಯಗಳ ವಿದ್ಯಾರ್ಥಿಗಳು ಪ್ರಾಥಮಿಕ ಹಂತದಲ್ಲಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯವಾಗಿ ಕಲಿಯಬೇಕು ಎಂದು ಹೇಳಲಾಗಿತ್ತು. ಇದು ದಕ್ಷಿಣದಲ್ಲಿ ವಿರೋಧಕ್ಕೆ ಕಾರಣವಾಗಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos