ಝಾನ್ಸಿ: ಕೇರಳ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಯಾಣಿಕರು ಬಿಸಿಲಿನ ತಾಪ ಹಾಗೂ ಬಿಸಿಗಾಳಿಯ ಹೊಡೆತಕ್ಕೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ನಡೆದಿದೆ.
ದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತ ಬಿಸಿಲಿನ ತಾಪ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವರು ಅಸ್ವಸ್ಥರಾಗುತ್ತಿದ್ದಾರೆ. ಇದರ ಬೆನ್ನಲ್ಲೇ ಬಿಸಿಗಾಳಿಯಿಂದಾಗಿ ಕೇರಳ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮೃತಪಟ್ಟಿದ್ದಾರೆ.
ಮೃತರು ಬುಂಡೂರ್ ಪಳನಿಸ್ವಾಮಿ (80), ಬಾಲಕೃಷ್ಣ ರಾಮಸ್ವಾಮಿ (69), ಚಿನ್ನಾರೆ (71) ಮತ್ತು ದಿವಾ ನಾಯ್ (71) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಪ್ರಯಾಣಿಕ ಸುಬ್ಬರಿಯಾ (71) ಅಸ್ವಸ್ಥರಾಗಿದ್ದು ಅವರನ್ನು ಝಾನ್ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿಗಳ ಪ್ರಕಾರ, ಕೇರಳ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕೆಲ ಪ್ರಯಾಣಿಕರು ಸೋಮವಾರ ಸಂಜೆ ಉಸಿರಾಟದ ತೊಂದರೆ ಹಾಗೂ ಅಸ್ವಸ್ಥತೆಯಿಂದ ಬಳಲುತ್ತಿರುವುದಾಗಿ ಹೇಳಿದ್ದರು. ಆದರೆ ಝಾನ್ಸಿ ತಲುಪುವುದರೊಳಗೆ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ಇಳಿಸಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಎಲ್ಲಾ ನಾಲ್ಕು ಪ್ರಯಾಣಿಕರು ಆಗ್ರಾದಿಂದ ಕೊಯಮತ್ತೂರಿಗೆ S-8 ಮತ್ತು S-9 ಭೋಗಿಗಳಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಮೃತ ದೇಹಗಳನ್ನು ಮರಣೋತ್ತರ ಪರಿಕ್ಷೆ ಬಳಿಕ ಕೊಯಮತ್ತೂರಿಗೆ ಕಳುಹಿಸಲಾಗುವುದು. ಆಗ್ರಾ ಮತ್ತು ವಾರಾಣಾಸಿಗೆ ಭೇಟಿ ನೀಡಿದ್ದ 68 ಪ್ರಯಾಣಿಕರ ತಂಡದಲ್ಲಿ ಈ ನಾಲ್ವರು ಪ್ರಯಾಣಿಸುತ್ತಿದ್ದರು" ಎಂದು ರೈಲ್ವೆ ವಿಭಾಗೀಯ ಮ್ಯಾನೇಜರ್ ನೀರಜ್ ಅಂಬಿಶ್ಟ್ ಅವರು ತಿಳಿಸಿದ್ದಾರೆ.
ಸೋಮವಾರ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ 48.9 ಡಿಗ್ರಿ ಸೆಲ್ಸಿಯಸ್ ಮತ್ತು ಬಾಂಡಾದಲ್ಲಿ 49.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಜಸ್ಥಾನದಲ್ಲಿ ಉಷ್ಣಾಂಶ 50ರ ಗಡಿ ದಾಟಿದ್ದು, ಚುರುನಲ್ಲಿ 50.3 ಡಿಗ್ರಿ ಸೆಲ್ಸಿಯಸ್ ಮತ್ತು ಶ್ರೀ ಗಂಗಾನಗರದಲ್ಲಿ 48.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos