ನವದೆಹಲಿ: ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವುದು ಸವಾಲು, ಆದರೆ ರಾಜ್ಯಗಳ ಪ್ರಯತ್ನದಿಂದ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ನಡೆದ ಐದನೇ ನೀತಿ ಆಯೋಗದ ಸಭೆಯಲ್ಲಿ ಹೇಳಿದ್ದಾರೆ.
ಸಾಬ್ ಕಾ ಸಾಥ್, ಸಾಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಘೋಷಣೆ ಪೂರ್ಣಗೊಳಿಸುವಲ್ಲಿ ನೀತಿ ಆಯೋಗ ಪ್ರಮುಖ ಪಾತ್ರ ವಹಿಸುತ್ತದೆ ಎಂದು ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೊರತುಪಡಿಸಿದಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಹಿರಿಯ ಸಚಿವರುಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಕ್ಕೆ ಇತ್ತೀಚಿಗೆ ನಡೆದ ಚುನಾವಣೆಯನ್ನು ನೆನಪಿಸಿಕೊಂಡ ನರೇಂದ್ರ ಮೋದಿ, ದೇಶದ ಅಭಿವೃದ್ಧಿಗಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕಾದ ಸಮಯ ಇದಾಗಿದೆ. ಬಡತನ, ನಿರುದ್ಯೋಗ, ಬರ, ಪ್ರವಾಹ, ಮಾಲಿನ್ಯ, ಭ್ರಷ್ಟಾಚಾರ ಹಾಗೂ ಹಿಂಸೆಯ ವಿರುದ್ಧ ಒಗ್ಗಟ್ಟಾಗಿ ಹೋರಾಟ ನಡೆಸಬೇಕಾಗಿದೆ ಎಂದು ತಿಳಿಸಿದರು.
2024ರೊಳಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವುದು ಸವಾಲು, ಆದರೆ ಸಾಧಿಸಬಹುದು ಎಂದು ಹೇಳಿದ ಮೋದಿ, ರಾಜ್ಯಗಳು ತಮ್ಮ ಪ್ರಮುಖ ಸಾಮರ್ಥ್ಯವನ್ನು ಗುರುತಿಸಬೇಕು ಮತ್ತು ಜಿಡಿಪಿ ಗುರಿಗಳನ್ನು ಜಿಲ್ಲಾ ಮಟ್ಟದಿಂದಲೇ ಹೆಚ್ಚಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಬರ ಪರಿಸ್ಥಿತಿಗಾಗಿ ಹೆಚ್ಚಿಗೆ ಬೆಳೆ ಬೆಳೆಯುವ ಕಾರ್ಯತಂತ್ರ ಅಳವಡಿಸಿಕೊಳ್ಳುವ ಮೂಲಕ ಬರ ಪರಿಸ್ಥಿತಿಯನ್ನು ನಿವಾರಿಸಬೇಕು. ನೀರಿನ ಸಂರಕ್ಷಣೆ ಹಾಗೂ ನಿರ್ವಹಣೆಗಾಗಿ ನೂತನವಾಗಿ ಸೃಷ್ಟಿಸಲಾಗಿರುವ ಜಲ ಶಕ್ತಿ ಸಚಿವಾಲಯ ನೆರವು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಭೆಯಲ್ಲಿ ತಿಳಿಸಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos