ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಗ್ಗೆ ನಡೆದ ಸಭೆಯಲ್ಲಿ ಸಂಸತ್ತಿನಲ್ಲಿ ಕಾಂಗ್ರೆಸ್ ಪಕ್ಷ ಅನುಸರಿಸಬೇಕಾದ ಕಾರ್ಯತಂತ್ರ ಕುರಿತಂತೆ ಚರ್ಚೆ ನಡೆಸಲಾಯಿತು.
ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಹಿರಿಯ ಕಾಂಗ್ರೆಸ್ ಮುಖಂಡರಾದ ಎ.ಕೆ. ಆಂಟನಿ, ಜೈರಾಮ್ ರಮೇಶ್, ಗುಲಾಂ ನಬಿ ಅಜಾದ್, ಆನಂದ್ ಶರ್ಮಾ, ಪಿ. ಚಿದಂಬರಂ, ಅಧಿರ್ ರಂಜನ್ ಚೌದರಿ ಮತ್ತು ಕೆ ಸುರೇಶ್ ಮತ್ತಿತರರು ಪಾಲ್ಗೊಂಡಿದ್ದರು.
ಪ್ರತಿಪಕ್ಷಗಳಲ್ಲಿ ಉತ್ತಮ ಸಮನ್ವಯತೆ ಮೂಡಿಸುವ ಸಂಬಂಧ ನಾಯಕರು ಸಭೆಯಲ್ಲಿ ಚರ್ಚೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಅಧೀರ್ ರಂಜನ್ ಚೌದರಿ, ಅನೇಕ ವಿಚಾರಗಳ ಕುರಿತಂತೆ ಚರ್ಚೆ ನಡೆಸಲಾಯಿತು. ಆದರೆ, ಲೋಕಸಭೆಯಲ್ಲಿನ ಪ್ರತಿಪಕ್ಷ ನಾಯಕರ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಹಿರಿಯ ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ, ಸರ್ಕಾರ ಸಂಸದೀಯ ಪ್ರಕ್ರಿಯೆಯನ್ನು ಪಾಲಿಸಬೇಕು. ಪ್ರಮುಖ ಮಸೂದೆಗಳನ್ನು ಬಗ್ಗೆ ಸದನದಲ್ಲಿ ಚರ್ಚೆಯಾಗುವ ಮುನ್ನ ಸಂಸದೀಯ ಸಮಿತಿಗೆ ಕಳುಹಿಸಬೇಕು ಎಂದು ಹೇಳಿದರು.
ಆದಾಗ್ಯೂ, ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕರ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿ ಗುಲಾಂ ನಬಿ ಅಜಾದ್ ಹಾಗೂ ಉಪನಾಯಕರಾಗಿ ಆನಂದ್ ಶರ್ಮಾ ಮುಂದುವರೆಯಲಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos