ನವದೆಹಲಿ: ಗುಜರಾತ್ ನ ಎರಡು ರಾಜ್ಯಸಭಾ ಸ್ಥಾನಗಳಿಗೆ ಏಕಕಾಲದಲ್ಲಿ ಉಪ ಚುನಾವಣೆ ನಡೆಸಬೇಕೆಂದು ಗುಜರಾತ್ ಕಾಂಗ್ರೆಸ್ ಸಮಿತಿ ಸಲ್ಲಿಸಿದ್ದ ಮನವಿಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ಕೇಳಿ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.
ಇದೇ 24ರೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಆಯೋಗಕ್ಕೆ ಸೂಚಿಸಿದೆ. ಜೂನ್ 25ರಂದು ನ್ಯಾಯಾಲಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.
ಇದು ಚುನಾವಣಾ ಅರ್ಜಿ ಮೂಲಕ ವಿಚಾರಣೆ ನಡೆಸಬಹುದಾದ ಪ್ರಕರಣವಲ್ಲದಿರುವುದರಿಂದ ತುರ್ತು ವಿಚಾರಣೆ ನಡೆಸುವ ಅವಶ್ಯಕತೆಯಿದೆ ಎಂದು ನ್ಯಾಯಪೀಠ ಹೇಳಿದೆ.
ಉಪ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಬಗ್ಗೆ ದೆಹಲಿ ಹೈಕೋರ್ಟ್ ತೀರ್ಪು ನೀಡಿತ್ತು ಎಂದು ಗುಜರಾತ್ ಕಾಂಗ್ರೆಸ್ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ವಿವೇಕ್ ತಂಖ ಹೇಳಿದ್ದರು.
ಇದಕ್ಕೆ ಉತ್ತರಿಸಿದ ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ರಜಾ ಪೀಠ, ಈಗಲೇ ಏನೂ ಹೇಳಲು ಸಾಧ್ಯವಿಲ್ಲ. ಇದು ಸಾಮಾನ್ಯ ಹುದ್ದೆಯೇ ಅಥವಾ ಶಾಸನಬದ್ಧ ಹುದ್ದೆಯೇ ಎಂದು ನಾವು ತೀರ್ಮಾನಿಸಬೇಕು. ಹೀಗಾಗಿ ಈ ಕುರಿತು ವಿಚಾರಣೆ ನಡೆಸಬೇಕಾದ ಅವಶ್ಯಕತೆಯಿದೆ ಎಂದರು.
ಗುಜರಾತ್ ನ ಗಾಂಧಿನಗರ ಕ್ಷೇತ್ರದಿಂದ ಲೋಕಸಭೆಗೆ ಅಮಿತ್ ಶಾ ಅವರು ಮತ್ತು ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಸ್ಮೃತಿ ಇರಾನಿ ಗೆದ್ದು ಬಂದ ನಂತರ ರಾಜ್ಯಸಭೆಯಲ್ಲಿ 2 ಸ್ಥಾನ ಖಾಲಿಯಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos