ನವದೆಹಲಿ: ಒಂದು ದೇಶ ಒಂದು ತೆರಿಗೆ(ಜಿಎಸ್ ಟಿ) ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ 'ಒಂದು ದೇಶ, ಒಂದು ಪಡಿತರ ಚೀಟಿ' ವ್ಯವಸ್ಥೆ ಜಾರಿಗೆ ಮುಂದಾಗಿದ್ದು, ಇದಕ್ಕೆ ಒಂದು ವರ್ಷದ ಗಡುವು ನೀಡಿದೆ.
ಒಂದು ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ನಾಗರಿಕರು ದೇಶದ ಯಾವುದೇ ರಾಜ್ಯದಲ್ಲಿ ಬೇಕಾದರೂ ಪಡಿತರ ಪಡೆಯುವ ‘ಒಂದು ದೇಶ ಒಂದೇ ಪಡಿತರ ಚೀಟಿ’ಯೋಜನೆಯನ್ನು 2020ರ ಜೂನ್ 30ರೊಳಗೆ ಜಾರಿಗೆ ತರಬೇಕು ಎಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ಈ ವ್ಯವಸ್ಥೆಯಡಿ ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳು ದೇಶದ ಯಾವುದೇ ಭಾಗದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಸಬ್ಸಿಡಿದರದಲ್ಲಿ ಆಹಾರ ಧಾನ್ಯಗಳನ್ನು ಖರೀದಿಸಬಹುದಾಗಿದೆ.
ಕರ್ನಾಟಕ, ಆಂಧ್ರಪ್ರದೇಶ, ಹರಿಯಾಣ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್, ತೆಲಂಗಾಣ ಮತ್ತು ತ್ರಿಪುರಾ ಸೇರಿ ಒಟ್ಟು ಹತ್ತು ರಾಜ್ಯಗಳು ಈಗಾಗಲೇ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು (ಪಿಡಿಎಸ್) ಒದಗಿಸುತ್ತಿವೆ ಎಂದು ಕೇಂದ್ರ ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಹೇಳಿದ್ದಾರೆ.
'ಮುಂಬರುವ 2020ರ ಜೂನ್ 30ರ ವೇಳೆಗೆ ಇಡೀ ದೇಶದಲ್ಲಿ ತಪ್ಪದೇ ಒಂದು ದೇಶ, ಒಂದು ರೇಷನ್ ಕಾರ್ಡ್ ವ್ಯವಸ್ಥೆಯನ್ನು ಅಳವಡಿಸಬೇಕು. ಈ ವ್ಯವಸ್ಥೆಯ ತ್ವರಿತ ಅನುಷ್ಠಾನಕ್ಕೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದೇವೆ' ಎಂದು ಸಚಿವರು ತಿಳಿಸಿದ್ದಾರೆ.
ಒಂದು ಕುಟುಂಬ ಅಥವಾ ವ್ಯಕ್ತಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಾಸ ಸ್ಥಳ ಬದಲಿಸಿದರೂ ಯಾವ ಬಡವರೂ ಪಿಡಿಎಸ್ ಸೌಲಭ್ಯದಿಂದ ವಂಚಿತರಾಗಬಾರದು ಎಂಬ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಅಲ್ಲದೆ, ನಕಲಿ ಪಡಿತರ ಚೀಟಿದಾರರನ್ನು ಪಟ್ಟಿಯಿಂದ ಹೊರಹಾಕಲು ಸಹ ಇದು ನೆರವಾಗುತ್ತದೆ ಎಂದು ಪಾಸ್ವಾನ್ ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos