ಜೈಪುರ: ರಾಜಸ್ಥಾನದ ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನದ ಪರ ಗೂಢಚಾರಿಕೆ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮೂಲಗಳ ಪ್ರಕಾರ ಭಾರತದ ಗಡಿಯಲ್ಲಿ ಭಾರತೀಯ ಸೇನೆಯ ಚಲನವಲನಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದ ಆರೋಪದ ಮೇರೆಗೆ 36ರ ವರ್ಷದ ಶಂಕಿತನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು 36ರ ವರ್ಷದ ನವಾಬ್ ಖಾನ್ ಎಂದು ಗುರುತಿಸಲಾಗಿದ್ದು, ಈತ ಭಾರತ-ಪಾಕಿಸ್ತಾನ ಗಡಿಯಲ್ಲಿರುವ ರಾಜಸ್ತಾನದ ಜೈಸಲ್ಮೆರ್ ಜಿಲ್ಲೆಯ ಸ್ಯಾಮ್ ಪ್ರದೇಶದ ನಿವಾಸಿ ಎಂದು ತಿಳಿದುಬಂದಿದೆ.
ಭಾನುವಾರ ಬೆಳಗ್ಗೆ ಗಡಿಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಗಮನಿಸಿದ ಪೊಲೀಸರು ಕೂಡಲೇ ಆತನನ್ನು ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಆತ ನೀಡಿದ ಉತ್ತರಗಳಿಂದ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೂಡಲೇ ಆತನನ್ನು ಭಾರತೀಯ ಸೇನೆ ವಶಕ್ಕೆ ತೆಗೆದುಕೊಂಡಿತ್ತು. ಜೀಪು ಚಾಲಕನಾಗಿ ಕೆಲಸ ಮಾಡುತ್ತಿದ್ದ ನವಾಬ್ ಖಾನ್ ಪಾಕಿಸ್ತಾನದ ಗೂಢಚಾರನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ. ಈತ ಭಾರತದ ಸೇನೆಯ ಮಾಹಿತಿಯನ್ನು ಕಲೆ ಹಾಕಿ ಪಾಕಿಸ್ತಾನಕ್ಕೆ ವ್ಯಾಟ್ಸಪ್ ನಲ್ಲಿ ಸಂಕೇತ ಭಾಷೆಯಲ್ಲಿ ಕಳುಹಿಸುತ್ತಿದ್ದ ಎಂದು ತಿಳಿದು ಬಂದಿದೆ ಎಂದು ಗುಪ್ತಚರ ವಿಭಾಗದ ಎಡಿಜಿ ಉಮೇಶ್ ಮಿಶ್ರಾ ತಿಳಿಸಿದ್ದಾರೆ.
ಖಾನ್ ಕಳೆದ ವರ್ಷ ಪಾಕಿಸ್ತಾನಕ್ಕೆ ತೆರಳಿ ಐಎಸ್ಐನಿಂದ ತರಬೇತಿ ಪಡೆದಿದ್ದನು. ಈತನಿಗೆ ಪಾಕಿಸ್ತಾನದ ಐಎಸ್ಐ ಭಾರತದ ಸೇನೆಯ ಚಲನವಲನಗಳ ಮಾಹಿತಿಯನ್ನು ಸಂಗ್ರಹಿಸಿ ಒದಗಿಸುವ ಜವಾಬ್ದಾರಿಯನ್ನು ನೀಡಿತ್ತು ಎಂದು ವಿಚಾರಣೆಯಿಂದ ಗೊತ್ತಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos