ದೇಶ

ಹಿಂದೂ ಭಯೋತ್ಪಾದಕ ಹೇಳಿಕೆ: ನಟ ಕಮಲ್ ಹಾಸನ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!

Srinivasamurthy VN
ನವದೆಹಲಿ: 'ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ' ಎಂಬ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಬಿಜೆಪಿ ದಾಖಲಿಸಿದ್ದ ದೂರನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ನಟ ಕಮಲ್ ಹಾಸನ್ ನೀಡಿದ್ದ ವಿವಾದಾತ್ಮಕ ಹೇಳಿಕೆ ಸಂಬಂಧ ದೆಹಲಿಯ ಪಾಟಿಯಾಲ ಕೋರ್ಟ್ ನಲ್ಲಿ 2 ಪ್ರಕರಣಗಳು ದಾಖಲಾಗಿತ್ತು. ನಟ ಕಮಲ್ ಹಾಸನ್ ಅವರ ಹೇಳಿಕೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಯಾಗಿದೆ ಎಂದು ಆರೋಪಿಸಿರುವ ಬಿಜೆಪಿ ಪಕ್ಷದ ವಕ್ತಾರ ನ್ಯಾಯವಾದಿ ಆಶ್ವಿನಿ ಉಪಾಧ್ಯಾಯ ಸುಪ್ರೀಂ ಕೋರ್ಟ್​ನಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದರೆ, ದೇಶದಲ್ಲಿ ಕೋಮುದ್ವೇಷವನ್ನು ಹುಟ್ಟು ಹಾಕಲು ಪ್ರಯತ್ನಿಸುತ್ತಿರುವ ಕಮಲ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಹಿಂದೂ ಸೇನಾ ಸಂಘದ ಮುಖ್ಯಸ್ಥ ವಿಷ್ಣು ಗುಪ್ತಾ ದೆಹಲಿಯ ಪಟಿಯಾಲ ಕೋರ್ಟ್​ನಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದರು.
ಈ ಎರಡು ಪ್ರಕರಣಗಳ ಪೈಕಿ ಬಿಜೆಪಿ ಪಕ್ಷದ ವಕ್ತಾರ ನ್ಯಾಯವಾದಿ ಆಶ್ವಿನಿ ಉಪಾಧ್ಯಾಯ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಪಾಟಿಯಾಲ ಕೋರ್ಟ್ ವಜಾಗೊಳಿಸಿದೆ. ಅಲ್ಲದೆ ರಾಜಕೀಯ ಪಕ್ಷಗಳು ಧಾರ್ಮಿಕ ವಿಚಾರವನ್ನು ಮುಂದಿಟ್ಟುಕೊಂಡು ಲಾಭ ಪಡೆಯುವ ಸಂಗತಿಗಳ ಕುರಿತು ಗಮನ ಹರಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
ಇನ್ನು ಈ ಹಿಂದೆ ಅಲ್ಪ ಸಂಖ್ಯಾತರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ್ದ ನಟ ಹಾಗೂ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್, ಭಾರತದ ಮೊದಲ ಭಯೋತ್ಪಾದಕ ಹಿಂದೂ ಆತನ ಹೆಸರು ನಾಥೂರಾಮ್ ಗೋಡ್ಸೆ' ಎಂದು ವಿವಾದಾತ್ಮಕ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಕಮಲ್ ಹಾಸನ್ ಅವರ ಹೇಳಿಕೆ ವಿರುದ್ಧ ದೇಶದಾದ್ಯಂತ ಪರ ವಿರೋಧ ಚರ್ಚೆಗಳು ಭುಗಿಲೆದ್ದಿವೆ. 
SCROLL FOR NEXT