ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ರಾಹುಲ್ ಗಾಂಧಿ ಅವರು ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ನಿನ್ನೆ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಸಿಡಬ್ಲ್ಯುಸಿ ಸದಸ್ಯರು ರಾಹುಲ್ ಗಾಂಧಿ ಅವರ ನಿಲುವನ್ನು ಸರ್ವಾನುಮತದಿಂದ ತಿರಸ್ಕರಿಸಿದ್ದರು.
ಇದೀಗ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿರುವ ರಾಹುಲ್ ಗಾಂಧಿ, ಚುನಾವಣೆ ಸೋಲಿಗೆ ಯಾರು ಹೊಣೆ ಮತ್ತು ಅವರ ವಿರುದ್ಧ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಮುಂದಿನ 10 ದಿನಗಳಲ್ಲಿ ನಿರ್ಧರಿಸಲಿದ್ದಾರೆ.
ಸಿಡಬ್ಲ್ಯೂಸಿ ಸಭೆಯಲ್ಲಿ ಹಿರಿಯ ನಾಯಕರ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದ ರಾಹುಲ್ ಗಾಂಧಿ, ಪಕ್ಷದ ಹಿರಿಯ ನಾಯಕರೆಲ್ಲಾ ತಮ್ಮ ಮಕ್ಕಳನ್ನು ಮೇಲೆ ತರುವುದರಲ್ಲೇ ತಲ್ಲೀನರಾಗಿದ್ದಾರೆ. ಅದೇನಿದ್ದರೂ ತಾನು ಪಕ್ಷ ಸಂಘಟಿಸಲು ಶ್ರಮಿಸುತ್ತೇನೆ. ಆದರೆ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದು ಪಟ್ಟು ಹಿಡಿದಿದ್ದರು.